ಬಳ್ಳಾರಿ: ‘ಬಿಜೆಪಿಗೆ ಬಹುಮತ ದೊರಕುತ್ತದೆ. 130ಕ್ಕಿಂತ ಹೆಚ್ಚು ಸ್ಥಾನವನ್ನು ಪಕ್ಷ ಗೆಲ್ಲಲಿದೆ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಲಿದ್ದಾರೆ’ ಎಂದು ಸಂಸದ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.
ನಗದ ದೇವಿನಗರದಲ್ಲಿರುವ ಮತಗಟ್ಟೆಯಲ್ಲಿ ಪತ್ನಿ ಭಾಗ್ಯಲಕ್ಷ್ಮಿ ಅವರೊಂದಿಗೆ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಸಾಮಾನ್ಯ ಕಾರ್ಯಕರ್ತ. ಪಕ್ಷ ನನ್ನ ತಾಯಿ ಸ್ಥಾನದಲ್ಲಿದೆ. ನನಗೆ ಯಾವ ಸ್ಥಾನ ಸಿಗುತ್ತದೆ ಎಂಬುದು ಮುಖ್ಯವಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಮುಖ್ಯ’ ಎಂದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರವೆರಡರಲ್ಲೂ ಸೋಲುತ್ತಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುವ ಭಯದಿಂದ ಅವರು ಬಾದಾಮಿಯಲ್ಲಿ ಸ್ಪರ್ಧಿಸಿದ್ದಾರೆ. ಆದರೆ ಅಲ್ಲಿನ ಜನಕ್ಕೆ ಯಾರು ಹೇಗೆ ಎಂಬುದು ಗೊತ್ತಿದೆ’ ಎಂದು ಮಾರ್ಮಿಕವಾಗಿ ನುಡಿದರು.