ಬೆಂಗಳೂರು: ‘ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ನಾನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ನಮಗೆ ಯಾವುದೇ ಭಯ ಇಲ್ಲ. ಯಾವುದೇ ಪಕ್ಷದ ಸಹಕಾರ ನಮಗೆ ಬೇಕಾಗಿಲ್ಲ. ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿದಂತೆ ಎಲ್ಲರ ಆಶೀರ್ವಾದದಿಂದ ನಾವು ಗೆಲ್ಲುತ್ತೇವೆ’ ಎಂದು ಹೇಳಿದರು.
‘15ರಂದು ಮೋದಿ, ಶಾ ಅವರನ್ನು ಭೇಟಿ ಮಾಡಿ, ಪ್ರಮಾಣ ವಚನ ಸ್ವೀಕಾರಕ್ಕೆ ದಿನಾಂಕ ನಿಗದಿಪಡಿಸುವ ಬಗ್ಗೆ ಚರ್ಚಿಸುತ್ತೇನೆ. ಬಳಿಕ ಶಾಸಕರ ಸಭೆ ನಡೆಸುತ್ತೇನೆ’ ಎಂದರು.
‘ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ಹಾಗೂ ರೈತ ವಿರೋಧಿಯಾಗಿತ್ತು. ಕಾಂಗ್ರೆಸ್ 70ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವುದಿಲ್ಲ. ಜೆಡಿಎಸ್ 23 ಕಡೆ ಗೆಲ್ಲಲಿದೆ. ಪಕ್ಷೇತರರರು ಮೂರರಿಂದ ನಾಲ್ಕು ಕ್ಷೇತ್ರಗಳಲ್ಲಿ ಜಯ ಗಳಿಸಲಿದ್ದಾರೆ’ ಎಂದರು.