ಕೊಲಂಬೊ: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಉಂಟಾಗಿ 8 ಸಾವಿರಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಭಾನುವಾರ ಸುರಿದ ಭಾರಿ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಸೋಮವಾರ ಬೆಳಿಗ್ಗೆಯಿಂದ ಮಳೆ ಪ್ರಮಾಣ ಕಡಿಮೆಯಾಗಿದೆ ಎಂದು ಶ್ರೀಲಂಕಾದ ವಿಪತ್ತು ನಿರ್ವಹಣಾ ಕೇಂದ್ರದ ವಕ್ತಾರ ಪ್ರದೀಪ್ ಕೊಡಿಪ್ಪಿಲ್ಲಿ ತಿಳಿಸಿದ್ದಾರೆ.
ಇಲ್ಲಿನ ಗಾಲ್ ಮತ್ತು ಕಲುತರ ಜಿಲ್ಲೆಗಳಲ್ಲಿ 8,377 ಮಂದಿ ಪ್ರವಾಹದಿಂದ ತೊಂದರೆ ಎದುರಿಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರವಾಹದಿಂದ ಯಾವುದೇ ಸಾವು–ನೋವು ಉಂಟಾಗಿಲ್ಲ. ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷ ಸಂಭವಿಸಿದ್ದ ಪ್ರವಾಹದಿಂದ 20 ಸಾವಿರ ಜನರನ್ನು ಸ್ಥಳಾಂತರಿಸಲಾಗಿತ್ತು. ಪ್ರವಾಹದಲ್ಲಿ 92 ಜನ ಮೃತಪಟ್ಟಿದ್ದರು. 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು.