ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿರುವ ಬಿ.ಎಸ್. ಯಡಿಯೂರಪ್ಪ, ಆದಷ್ಟು ಬೇಗ ಬಹುಮತ ಸಾಬೀತು ಪಡಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಸಚಿವರುಗಳಾದ ಅನಂತಕುಮಾರ್, ಸದಾನಂದ ಗೌಡ ಹಾಗೂ ಇತರ ಮುಖಂಡರೊಂದಿಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ, ಪ್ರಧಾನಿ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಧನ್ಯವಾದ ಹೇಳಿದರು.
ಬಹುಮತ ಸಾಬೀತು ಪಡಿಸಲು 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಆದರೆ ಅಷ್ಟು ದಿನಗಳ ಅಗತ್ಯವಿಲ್ಲ ಎಂದ ಯಡಿಯೂರಪ್ಪ ಕಾಂಗ್ರೆಸ್, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದಗಂಗಾ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ಮೋದಿ ಕನಸು ನನಸಾಗಿಸುವ ಸಂಕಲ್ಷ
ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡುವ ಮೋದಿ ಕನಸನ್ನು ಸಾಕಾರಗೊಳಿಸಲಿದ್ದೇವೆ. ಮೋದಿ ಹಾಗೂ ಅಮಿತ್ ಶಾ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳುತ್ತೇವೆ. ನಮ್ಮ ಮೇಲೆ ದೊಡ್ಡ ಜವಾಬ್ದಾರಿಯಿದೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳನ್ನೂ ಗೆಲ್ಲುವ ಸಂಕಲ್ಪ ನಮ್ಮದು ಎಂದು ಹೇಳಿದರು.
ಸೋತ ಅಭ್ಯರ್ಥಿಗಳಿಗೆ ಅಭಯ
ಚುನಾವಣೆಯಲ್ಲಿ ಸೋಲು ಕಂಡ ಅಭ್ಯರ್ಥಿಗಳು ನೊಂದುಕೊಳ್ಳುವುದು ಬೇಡ. ಸರ್ಕಾರ ಸದಾ ನಿಮ್ಮೊಡನಿದೆ. ಪಕ್ಷವನ್ನು ಮತ್ತಷ್ಟು ಬಲಪಡಿಸೋಣ ಎಂದು ಕರೆ ನೀಡಿ ಕಾರ್ಯಕರ್ತರನ್ನೂ ಅಭಿನಂದಿಸಿದರು.
ಕಾಂಗ್ರೆಸ್–ಜೆಡಿಎಸ್ ವಿರುದ್ಧ ವಾಗ್ದಾಳಿ
ಕಾಂಗ್ರೆಸ್–ಜೆಡಿಎಸ್ನವರಿಗೆ ಚುನಾವಣೆಯಲ್ಲಿ ಜನರೇ ಉತ್ತರಿಸಿದ್ದಾರೆ. ಅವರಿಗೆ ಬಿಜೆಪಿ ಅಧಿಕಾರಕ್ಕೇರುವುದನ್ನು ಸಹಿಸಲು ಆಗುತ್ತಿಲ್ಲ. ಸಿದ್ದರಾಮಯ್ಯಗೆ ಚಾಮುಂಡೇಶ್ವರಿಯಲ್ಲಿ ಬಂದ ಸ್ಥಿತಿಯೇ ಚಾದಾಮಿಯಲ್ಲೂ ಬರುತ್ತಿತ್ತು ಎಂದು ವಾಗ್ದಾಳಿ ನಡೆಸಿದರು.
ಸಾಲಮನ್ನಾ ಮುಂದೂಡಿಕೆ
ಸಹಾಕಾರಿ ಸಂಘಗಳು, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಪಡೆದಿರುವ ಸಾಲ ಮನ್ನಾ ವಿಚಾರವನ್ನು ಅನಿವಾರ್ಯವಾಗಿ 2–3 ದಿನಗಳವರೆಗೆ ಮುಂದೂಡಲಾಗಿದೆ. ಆದರೆ ನಾವು ನೀಡಿದ್ದ ಭರವಸೆಗೆ ಬದ್ದರಾಗಿದ್ದೇವೆ ಎಂದು ಹೇಳಿದರು.
ಡಾಲರ್ಸ್ ಕಾಲೋನಿಯಲ್ಲಿನ ನಿವಾಸದಿಂದ ಪಕ್ಷದ ಕಚೇರಿಗೆ ಬಂದ ಯಡಿಯೂರಪ್ಪ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.