ಬೆಂಗಳೂರು: ಜೆಡಿಎಸ್– ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟ ಸೇರಲಿರುವ 21 ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸುವಂತೆ ಪಕ್ಷದ ರಾಜ್ಯ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೂಚಿಸಿದ್ದಾರೆ.
ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತಂತೆ ಬುಧವಾರ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜೊತೆ ಸಭೆ ನಡೆಸಿದರು.
ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸೇರಿ ಸಚಿವ 22 ಸ್ಥಾನಗಳನ್ನು ಕಾಂಗ್ರೆಸ್, ಮುಖ್ಯಮಂತ್ರಿ ಸೇರಿ 12 ಸ್ಥಾನಗಳನ್ನು ಜೆಡಿಎಸ್ ಹಂಚಿಕೊಳ್ಳಲಿದೆ.
ಸಮ್ಮಿಶ್ರ ಸರ್ಕಾರದ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ ನಡೆದಿದೆ. ರಾಜ್ಯ ಕಾಂಗ್ರೆಸ್ ನಾಯಕರು ಶುಕ್ರವಾರ ಅಥವಾ ಶನಿವಾರ ರಾಹುಲ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಸಮ್ಮಿಶ್ರ ಸರ್ಕಾರ ಸದನದಲ್ಲಿ ಇದೇ 25ರಂದು ಬಹುಮತ ಸಾಬೀತುಪಡಿಸಲಿದೆ. ಆ ಬಳಿಕ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಸಮೇತ ದೆಹಲಿಗೆ ಬರುವಂತೆ ರಾಹುಲ್ ತಿಳಿಸಿದ್ದಾರೆ.