ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಂಶಾಡಳಿತ, ಜಾತೀಯತೆ ಕೊನೆಗೊಳಿಸಿ ಅಭಿವೃದ್ಧಿಯ ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎನ್ಡಿಎ ಸರ್ಕಾರದ ನಾಲ್ಕು ವರ್ಷಗಳ ಸಾಧನೆಗಳನ್ನು ಪಟ್ಟಿ ಮಾಡಿದರು.
ದೇಶದ ಎದುರಾಳಿಗಳನ್ನು ಎದುರಿಸುವಲ್ಲಿ ಸರ್ಕಾರದ ಇಚ್ಛಾಶಕ್ತಿ ಏನೆಂಬುದನ್ನು 2016ರ ನಿರ್ದಿಷ್ಟ ದಾಳಿ (ಸರ್ಜಿಕಲ್ ಸ್ಟ್ರೈಕ್) ತೋರಿಸಿಕೊಟ್ಟಿದೆ ಎಂದು ಶಾ ಹೇಳಿದರು.
ಸುದೀರ್ಘ ಅವಧಿಯಿಂದ ನನೆಗುದಿಗೆ ಬಿದ್ದಿದ್ದ ‘ಒಂದು ಶ್ರೇಣಿ ಒಂದು ಪಿಂಚಣಿ (ಒಆರ್ಒಪಿ)’ ಯೋಜನೆಯನ್ನು ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಎನ್ಡಿಎ ಸರ್ಕಾರ ಅನುಷ್ಠಾನಗೊಳಿಸಿದೆ. ಕಪ್ಪುಹಣಕ್ಕೆ ಕಡಿವಾಣ ಹಾಕಲು ಎಸ್ಐಟಿ (ವಿಶೇಷ ತನಿಖಾ ತಂಡ) ರಚಿಸಿರುವುದೂ ಸೇರಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
‘ಮೋದಿ ಅವರ ಕಾರ್ಯವೈಖರಿ ಸೂಕ್ಷ್ಮವಾದದ್ದಾಗಿದೆ ಮತ್ತು ಹಳ್ಳಿಗಳ ಅಭಿವೃದ್ಧಿಗೆ ಅವರು ಬದ್ಧರಾಗಿದ್ದಾರೆ’ ಎಂದೂ ಅಮಿತ್ ಶಾ ಹೇಳಿದರು. ಅಲ್ಲದೆ, ಹಳ್ಳಿಗಳ ಅಭಿವೃದ್ಧಿ ಜತೆಗೆ ನಗರ ಪ್ರದೇಶಗಳ ಅಭಿವೃದ್ಧಿಗೂ ಗಮನ ಹರಿಸಲಾಗಿದೆ ಎಂದರು.