ನವದೆಹಲಿ: ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮಂಡಳಿಯ ಪ್ರಭಾರ ಅಧ್ಯಕ್ಷ ನ್ಯಾಯಮೂರ್ತಿ ಜವಾದ್ ರಹೀಮ್ ನೇತೃತ್ವದ ಪೀಠವು ಸೋಮವಾರ ಕೇಂದ್ರ ಗೃಹ ಸಚಿವಾಲಯ, ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳಿಗೆ ನೋಟಿಸ್ ನೀಡಿದೆ. ಜೂನ್ 26ರ ಒಳಗಾಗಿ ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.
ಮಸೀದಿಗಳಲ್ಲಿ ಬಳಸುವ ಧ್ವನಿವರ್ಧಕದಿಂದಾಗಿ ಸುತ್ತಮುತ್ತಲಿನ ಜನರಿಗೆ ಕಿರಿಕಿರಿಯಾಗುತ್ತಿದೆ ಎಂದು ದೆಹಲಿಯ ಅಖಂಡ ಭಾರತ ಮೋರ್ಚಾ ಎಂಬ ಸ್ವಯಂಸೇವಾ ಸಂಸ್ಥೆ ಹಸಿರು ನ್ಯಾಯಮಂಡಳಿಯ ಮೊರೆ ಹೋಗಿದೆ.
ಪ್ರಾರ್ಥನಾ ಮಂದಿರಗಳು, ಧಾರ್ಮಿಕ ಕೇಂದ್ರಗಳು ಕಟ್ಟುನಿಟ್ಟಾಗಿ ಶಬ್ದಮಾಲಿನ್ಯ ನಿಯಂತ್ರಣ ಮಾರ್ಗಸೂಚಿ ಪಾಲಿಸುವಂತೆ ನಿಗಾವಹಿಸಬೇಕು ಎಂದು ಹಸಿರು ನ್ಯಾಯಮಂಡಳಿಯು 2017ರಲ್ಲಿ ದೆಹಲಿ ಸರ್ಕಾರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿತ್ತು. ಆ ವಿಷಯವನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.