ನವದೆಹಲಿ: ದೇಶದಾದ್ಯಂತ 10 ದಿನಗಳ ಕಾಲ 7 ರಾಜಗ್ಯಗಳ ರೈತರು ಪ್ರತಿಭಟನೆಯನ್ನು ಶುಕ್ರವಾರ ಆರಂಭಿಸಿದ್ದಾರೆ.
ಬೆಳೆದ ಬೆಳೆಗೆ ಸೂಕ್ತ ಬೆಲೆ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಹತ್ತು ದಿನಗಳವರೆಗೆ ನಿರಶನ ಆರಂಭಿಸಿದ್ದಾರೆ.
ರಾಷ್ಟ್ರೀಯ ಕಿಸಾನ್ ಮಹಾಸಂಘದ ನೇತೃತ್ವದಲ್ಲಿ ರೈತರ ಪ್ರತಿಭಟನೆ ನಡೆಯತ್ತಿದೆ. ಈ ನಿರಶನಕ್ಕೆ 130ಕ್ಕೂ ಹೆಚ್ಚು ರೈತ ಸಂಘಟನೆಗಳು ಬೆಂಬಲ ಸೂಚಿಸಿವೆ. ರೈತರು ಬೆಳೆದ ತರಕಾರಿ ಹಾಗೂ ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ತರದಿರಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ದೇಶದ 30 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳ ಪಕ್ಕದಲ್ಲಿ ಧರಣಿ ನಡೆಸುತ್ತಿದ್ದಾರೆ. ರೈತರು ರಸ್ತೆ ತಡೆ ಮಾಡದೇ ಶಾಂತಿಯುತವಾಗಿ ಧರಣಿ ನಡೆಸಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಕಿಸಾನ್ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಅಭಿಮನ್ಯು ಕೊಹರ್ ತಿಳಿಸಿದ್ದಾರೆ. ರೈತರ ಪ್ರತಿಭಟನೆಗೆ ರೈತ ಸಂಘಗಳು ಮಾತ್ರವಲ್ಲದೆ 200ಕ್ಕೂ ಹೆಚ್ಚು ಸಾಮಾಜಿಕ ಸಂಘಟನೆಗಳು ಬೆಂಬಲ ಘೋಷಿಸಿವೆ ಎಂದು ಅವರು ಮಾಹಿತಿ ನೀಡಿದರು.
ಕರ್ನಾಟಕ, ಕೇರಳ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಮಹಾರಾಷ್ಟ್ರದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.