ತುಮಕೂರು: ಸಚಿವನಾಗಿ ಇಂಗ್ಲಿಷ್ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ನಾಡಿನ ಜನರಲ್ಲಿ ಕ್ಷಮೆ ಕೋರುತ್ತೇನೆ. ನಾಡಿನ ಜನರಿಗೆ ಆದ ನೋವಿನ ದುಪ್ಪಟ್ಟು ನೋವು ನನಗಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮದ್ ಹೇಳಿದರು.
ಶನಿವಾರ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅಶೀರ್ವಾದ ಪಡೆದ ಬಳಿಕ ಮಾತನಾಡಿದರು.
ನನ್ನ ತಂದೆ ತಾಯಿ ಬಾಲ್ಯದಲ್ಲಿ ಕನ್ನಡ ಶಾಲೆಗೆ ಸೇರಿಸಿರಲಿಲ್ಲ. ಇಂಗ್ಲಿಷ್ ಕಾನ್ವೆಂಟ್ ಶಾಲೆಯಲ್ಲಿ ಶಿಕ್ಷಣ ಪಡೆದೆ. ಹೀಗಾಗಿ ಕನ್ನಡ ಸರಿಯಾಗಿ ಮಾತನಾಡಲು ಆಗುತ್ತಿಲ್ಲ. ಪ್ರಮಾಣ ವಚನ ಸ್ವೀಕಾರ ಸಂದರ್ಭದಲ್ಲಿ ತಪ್ಪುಗಳಾಗಬಾರದು ಎಂಬ ಕಾರಣಕ್ಕೆ ಇಂಗ್ಲಿಷ್ನಲ್ಲಿ ಸ್ವೀಕರಿಸಿದೆ ಎಂದು ಪ್ರತಿಕ್ರಿಯಿಸಿದರು.
ದೇವೇಗೌಡರ ಸಲಹೆ ಪಡೆಯುವುದು ತಪ್ಪಿಲ್ಲ: ನಮ್ಮದು ಸಮ್ಮಿಶ್ರ ಸರ್ಕಾರ. ಇದರಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸಲಹೆ ಪಡೆಯುವುದರಲ್ಲಿ ತಪ್ಪಿಲ್ಲ. ಕಾಂಗ್ರೆಸ್ನಲ್ಲಿ ಟಿಕೆಟ್ ಹಂಚಿಕೆ ವಿಷಯದಲ್ಲಿ ದೇವೇಗೌಡರಾಗಲಿ, ಮುಖ್ಯಮಂತ್ರಿ ಕುಮಾರಸ್ವಾಮಿ ಹಸ್ತಕ್ಷೇಪ ಮಾಡಿಲ್ಲ ಎಂದರು.
ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ಗೊಂದಲ ಬಗೆ ಹರಿಯಲಿದೆ. ಎಂ.ಬಿ. ಪಾಟೀಲ್ ಅವರಿಗೆ ನೋವಾಗಿದೆ. ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ. ಪಕ್ಷ ತೊರೆಯುವುದಿಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.
ಸಚಿವ ಸ್ಥಾನ ನಿಭಾಯಿಸಿ ಅನುಭವ ಇಲ್ಲ. ಈಗ ತಾನೇ ಸಚಿವನಾಗಿದ್ದೇನೆ. ಸ್ವಲ್ಪ ದಿನ ಕಾಲಾವಕಾಶ ಬೇಕು. ಬಳಿಕ ಖಾತೆಯನ್ನು ಅತ್ಯುತ್ತಮವಾಗಿ ನಿಭಾಯಿಸುತ್ತೇನೆ ಎಂದರು.
ಸಚಿವ ಜಮೀರ್ ಅಹಮದ್ ಅವರು ಡಾ.ಶಿವಕುಮಾರ ಸ್ವಾಮೀಜಿ ಅಶೀರ್ವಾದ ಪಡೆದರು.