ರಾಯಚೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕರ ಸೂಚನೆ ಮೇರೆಗೆ ಜನ ಸಂಪರ್ಕ ಅಭಿಯಾನ ನಡೆಸಿ ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಬಲಪಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಸೈಯದ್ ಯಾಸೀನ್ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಸಂಸದ ಬಿ.ವಿ.ನಾಯಕ ಅವರಿಗೆ ಮತ್ತೆ ಟಿಕೆಟ್ ದೊರೆಯಲಿದ್ದು, ಅವರೇ ಅಭ್ಯರ್ಥಿಯಾಗಲಿದ್ದಾರೆ. ಪಕ್ಷದ ಗೆಲುವಿಗಾಗಿ ಶ್ರಮಿಸಲಾಗುವುದು ಎಂದರು.
ಯುವ ಕಾಂಗ್ರೆಸ್ ಉಪಾಧ್ಯಕ್ಷ ಸೈಯದ್ ಮೋಸಿನ್ ಅಮಾನತು ಮಾಡಲಾಗಿದೆ ಎಂಬ ವದಂತಿ ಹಬ್ಬಿಸಲಾಗಿದ್ದು, ಅಮಾನತು ಸತ್ಯಕ್ಕೆ ದೂರವಾಗಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಅವರೇ ಸ್ಪಷ್ಟಪಡಿಸಿದ್ದು, ಯಾರ ಉಚ್ಚಾಟನೆಯೂ ಮಾಡಿಲ್ಲ ಎಂದಿದ್ದಾರೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡಿದ ಪಕ್ಷೇತರ ಸದಸ್ಯರು ನಗರಸಭೆ ಅಧ್ಯಕ್ಷರಾಗಲು ಅವಕಾಶ ನೀಡುವುದಿಲ್ಲ. ಪಕ್ಷದ ಚಿಹ್ನೆಯಿಂದ ಗೆದ್ದವರನ್ನೇ ಅಧ್ಯಕ್ಷರನ್ನು ಮಾಡಲಾಗುತ್ತಿದೆ. ಈ ವಿಷಯದಲ್ಲಿ ಪಕ್ಷದ ನಿರ್ಧಾರಕ್ಕೆ ಬೆಂಬಲ ನೀಡಲಾಗುತ್ತದೆ ಎಂದು ತಿಳಿಸಿದರು.
ಜಿ.ಬಸವರಾಜ ರೆಡ್ಡಿ, ರಸೂಲ್ ಸಾಬ್, ಸೈಯದ್ ಇಕ್ಬಾಲ, ಮೊಹಮ್ಮದ ಫಾರೂಕ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.