ಹುಬ್ಬಳ್ಳಿ: ‘ಪ್ರತಿ ವ್ಯಕ್ತಿಯೂ ತನ್ನ ಸಮಾಜ, ಕಲಿತ ಶಾಲೆ, ಕಲಿಸಿದ ಗುರುಗಳು ಹಾಗೂ ತಾನು ಹುಟ್ಟಿದ ಕುಟುಂಬದ ಬಗ್ಗೆ ಅಭಿಮಾನ ಹೊಂದಿರಬೇಕು’ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ಚಿದಾನಂದರಡ್ಡಿ ಎಸ್. ಪಾಟೀಲ ಹೇಳಿದರು.
ರಡ್ಡಿ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ನಗರದ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮೂರನೇ ವರ್ಷದ
ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
‘ಯಾವುದೋ ಒಂದು ಕಾರ್ಯ ಸಾಧನೆಗೋಸ್ಕರವೇ ದೇವರು ಈ ಭೂಮಿಯಲ್ಲಿ ಪ್ರತಿಯೊಬ್ಬನನ್ನೂ ಹುಟ್ಟಿಸಿದ್ದಾನೆ’ ಎಂದು ತಮ್ಮ ಉಪನ್ಯಾಸದ ಅವಧಿಯಲ್ಲಿ ಅಭಿಪ್ರಾಯಪಟ್ಟರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಜಗದೀಶ ಶೆಟ್ಟರ್, ‘ಶೈಕ್ಷಣಿಕವಾಗಿ ಮುಂದುವರಿಯದಿದ್ದರೆ ಯಾವ ಸಮಾಜಕ್ಕೂ ಗೌರವ ಸಿಗುವುದಿಲ್ಲ. ಹೀಗಾಗಿ ಶೈಕ್ಷಣಿಕವಾಗಿ ಸಾಧನೆ ಮಾಡಲು ಪ್ರೋತ್ಸಾಹ ನೀಡುವ ಇಂಥ ಸನ್ಮಾನ ಕಾರ್ಯಕ್ರಮಗಳು ಅಗತ್ಯ’ ಎಂದರು.
ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ‘ಎಲ್ಲರೂ ಒಂದು ಎಂದು ಭಾವಿಸಿ ಕೆಲಸ ಮಾಡುವವನು ಹೆಚ್ಚಿನ ಗೌರವಕ್ಕೆ ಪಾತ್ರನಾಗುತ್ತಾನೆ’ ಎಂದರು.
ಮಹಿಳಾ ಅಖಿಲ ಕರ್ನಾಟಕ ಹೇಮರಡ್ಡಿ ಮಲ್ಲಮ್ಮ ಅಭಿವೃದ್ಧಿ ಸಂಘದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷೆ ಗೌರಮ್ಮ ಬ. ರಡ್ಡಿ, ಹೇಮರಡ್ಡಿ ಮಲ್ಲಮ್ಮನ ಜೀವನ ವೃತ್ತಾಂತವನ್ನು ವಿವರಿಸಿದರು.
ಯರೇಹೊಸಳ್ಳಿ ಹೇಮ–ವೇಮನಮಠದ ರಡ್ಡಿ ಗುರು ಪೀಠದ ವೇಮನಾನಂದ ಸ್ವಾಮೀಜಿ ಹಾಗೂ ಮಂಗಳವಾರಪೇಟದ ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ರಡ್ಡಿ ಕ್ಷೇಮಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ಫಕ್ಕೀರಡ್ಡಿ ಬ. ತಟ್ಟೀಮನಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪದಾಧಿಕಾರಿಗಳು ಇದ್ದರು.
ವಿದ್ಯಾರ್ಥಿಗಳಿಗೆ ಸನ್ಮಾನ
2017–18ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 75ಕ್ಕಿಂತಲೂ ಅಧಿಕ ಅಂಕ ಗಳಿಸಿದ ರಡ್ಡಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ನೀಡಿ ಸನ್ಮಾನಿಸಲಾಯಿತು. ಅಲ್ಲದೆ, ಸರ್ಕಾರಿ ಹಾಗೂ ವಿವಿಧ ಖಾಸಗಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ರಡ್ಡಿ ಸಮಾಜದ ಐದು ಜನರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.