ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗ ದಿನ ಆಚರಣೆಗೆ ತೀರ್ಮಾನ

ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ
Last Updated 12 ಜೂನ್ 2018, 10:55 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ನಾಲ್ಕನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಜೂನ್‌ 21ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಈ ಬಾರಿಯೂ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.

ಕೆ.ಎಂ. ಗಾಯತ್ರಿ ಅವರು ಮಾತನಾಡಿ, ‘ಕಳೆದ ಬಾರಿಯೂ ಅಂತರರಾಷ್ಟ್ರೀಯ ಯೋಗ ದಿನ ಆಚರಣೆಯನ್ನು ಎಲ್ಲರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸಲಾಗಿದೆ. ಈ ಬಾರಿಯೂ ಕೂಡ ಪೂರ್ವಸಿದ್ಧತೆಯೊಂದಿಗೆ ಯೋಗ ದಿನ ಆಚರಣೆಗೆ ಅಗತ್ಯ ಕ್ರಮ ವಹಿಸಬೇಕು. ಅಧಿಕಾರಿಗಳು, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಸಂಘಸಂಸ್ಥೆಗಳು ಯೋಗ ಆಸಕ್ತರನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಕಾರ್ಯಕ್ರಮವನ್ನು ನೆರವೇರಿಸಬೇಕು’ ಎಂದರು.

ಸಾಮೂಹಿಕ ಯೋಗ ಪ್ರದರ್ಶನ ತಾಲೀಮು ನಡೆಸಬೇಕು. ಹಲವು ಶಾಲಾ– ಕಾಲೇಜುಗಳಲ್ಲಿ ಈ ಹಿಂದಿನಿಂದಲೂ ಯೋಗ ಅಭ್ಯಾಸ ಮಾಡಲಾಗುತ್ತಿದೆ. ಇದರ ಜತೆ ವಿದ್ಯಾರ್ಥಿಗಳು, ಆಸಕ್ತರು ಯೋಗ ತಾಲೀಮು ನಡೆಸಿ ಯೋಗ ದಿನ ಆಚರಣೆಯಂದು ವಿಶೇಷ ಗಮನ ಸೆಳೆಯುವಂತೆ ಕಾರ್ಯಕ್ರಮ ಏರ್ಪಡಿಸಲು ಶಿಕ್ಷಣ ಇಲಾಖೆ, ಯೋಗ ಸಂಸ್ಥೆಗಳು ಕೈಜೋಡಿಸಬೇಕೆಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ, ‘ಶಿಷ್ಟಾಚಾರ ಅನುಸಾರ ಕಾರ್ಯಕ್ರಮ ಏರ್ಪಾಡು ಮಾಡಬೇಕು. ಸಾಮೂಹಿಕ ಯೋಗ ಪ್ರದರ್ಶನದ ಜತೆಗೆ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ
ವಿಶೇಷವಾಗಿ ಯೋಗ ಸ್ಪರ್ಧೆಯನ್ನು ಆಯೋಜನೆ ಮಾಡಬೇಕು. ಯೋಗ ಮಹತ್ವ ತಿಳಿಸುವ ಉಪನ್ಯಾಸವನ್ನೂ ಹಮ್ಮಿಕೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಪುನೀತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ, ಪತಂಜಲಿ ಯೋಗ ಸಂಸ್ಥೆ ಅಧ್ಯಕ್ಷ ಎಚ್.ಜಿ. ಕುಮಾರಸ್ವಾಮಿ, ಧರ್ಮಸ್ಥಳ ಮಂಜುನಾಥೇಶ್ವರ
ಪ್ರಕೃತಿ ಸಂಸ್ಥೆಯ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಯೋಗದ ಕುರಿತು ಅರಿವು

ಯೋಗದ ಪ್ರಾಮುಖ್ಯತೆ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ಸಹ ನಡೆಸಬೇಕು. ಯೋಗ ನಡಿಗೆಯಂತಹ ಕಾರ್ಯಕ್ರಮಗಳ ಆಯೋಜನೆಯನ್ನು ಪೂರ್ವಭಾವಿಯಾಗಿ ಏರ್ಪಡಿಸಬೇಕು. ಕಳೆದ ಬಾರಿ ಯೋಗ ದಿನಾಚರಣೆ ನಡೆದ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಅಗತ್ಯವಿರುವ ಎಲ್ಲ ಸಿದ್ಧತಾ ಕ್ರಮ ತೆಗೆದುಕೊಳ್ಳಬೇಕು ಎಂದು ಡಾ. ಕೆ. ಹರೀಶ್ ಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT