ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾಯತ ಧರ್ಮ: ಪ್ರಧಾನಿ ಬಳಿಗೆ ನಿಯೋಗ

Last Updated 15 ಜೂನ್ 2018, 7:02 IST
ಅಕ್ಷರ ಗಾತ್ರ

ಬೆಳಗಾವಿ: ಸ್ವತಂತ್ರ ಲಿಂಗಾಯತ ಧರ್ಮದ ಮಾನ್ಯತೆ ನೀಡುವಂತೆ ಆಗ್ರಹಿಸುವುದಕ್ಕಾಗಿ, ನಮ ಬೇಡಿಕೆಯನ್ನು ಮನವರಿಕೆ ಮಾಡಿಕೊಡುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವತ ಬಳಿಗೆ ನಿಯೋಗ ಹೋಗಲಾಗುವುದು ಎಂದು ನಾಗನೂರ ರುದ್ರಾಕ್ಷಿ ಮಠದ ಸಿದ್ಧರಾಮ ಸ್ವಾಮೀಜಿ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ. ಬಹುಸಂಖ್ಯಾತ ಸಮಾಜದ ವಿರೋಧವನ್ನು ಬಿಜೆಪಿ ಕಟ್ಟಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಚಳವಳಿ ದನಿ ಕ್ಷೀಣಿಸಿಲ್ಲ. ಕೇಂದ್ರ ಸರ್ಕಾರಕ್ಕೆ ಸಮಯ ನೀಡಿದ್ದೇವೆ. ಆದರೆ, ರಾಜ್ಯ ಸರ್ಕಾರ ಕಳುಹಿಸಿರುವ ಶಿಫಾರಸು ಕಡತ ವಾಪಸ್ ಆಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಅಂತಹ ಬೆಳವಣಿಗೆ ನಡೆದಿಲ್ಲ. ರಾಜ್ಯ ಕಳುಹಿಸಿರುವ ಶಿಫಾರಸು ಕೇಂದ್ರದ ಅಂಗಳದಲ್ಲಿಯೇ ಇದೆ. ಚಳವಳಿ ದನಿ ಅಡಗಿಸುವ ದುರುದ್ದೇಶದಿಂದ ವೀರಶೈವವಾದಿಗಳ ಕೈವಾಡದಿಂದಾಗಿ ಅಪಪ್ರಚಾರ ನಡೆಯುತ್ತಿದೆ. ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಒಂದೊಮ್ಮೆ ಕೇಂದ್ರ ಸರ್ಕಾರವು ವಾಪಸ್ ಮಾಡಿದರೆ ನಮಗೇ ಅನುಕೂಲವಾಗುತ್ತದೆ. ಸುಪ್ರೀಂ ಕೋರ್ಟ್‌ಗೆ ಹೋಗಿ ನ್ಯಾಯ ಕೇಳುತ್ತೇವೆ. ಹೀಗಾಗಿ ಆ ಧೈರ್ಯವನ್ನು ಕೇಂದ್ರ ಮಾಡುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದರು.

ಸಮಾಜಕ್ಕೆ ಅನ್ಯಾಯವಾದರೆ ರಾಷ್ಟ್ರೀಯ ಪಕ್ಷ ತೀವ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ಲಿಂಗಾಯತ ಧರ್ಮ ಹೋರಾಟಕ್ಕೆ ಬೆಂಬಲ ನೀಡಿದ್ದರಿಂದ ಕಾಂಗ್ರೆಸ್‌ಗೆ ಅನಾನುಕೂಲ ಆಗಿಲ್ಲ. ಹಾಗೆ ನೋಡಿದರೆ ಅವರಿಗೆ ಬೆಂಬಲ ದೊರೆತಿದೆ. ಇದಕ್ಕೆ ಅಂಕಿಅಂಶಗಳು ಮುಂದಿವೆ ಎಂದು ಸ್ಪಷ್ಟಪಡಿಸಿದರು.

ಸಮಾಜದ ಅನುಭವಿಗಳಾದ ಎಂ.ಬಿ.ಪಾಟೀಲ ಹಾಗೂ ಬಸವರಾಜ ಹೊರಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉತ್ತರ ಕರ್ನಾಟಕ ಹಾಗೂ ಲಿಂಗಾಯತ ಸಮಾಜವನ್ನು ನಿರ್ಲಕ್ಷಿಸಬಾರದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT