ಬಾಗಲಕೋಟೆ: ಇಲ್ಲಿನ ಬಿ.ವಿ.ವಿ ಸಂಘದ ಬಸವೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜು, ಅಕ್ಟೋಬರ್ 13 ಹಾಗೂ 14ರಂದು ಎರಡು ದಿನಗಳ ಕಾಲ ನಗರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಹಾಕಿ ಟೂರ್ನಿಯ ಆತಿಥ್ಯ ವಹಿಸಲಿದೆ.
ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಟೂರ್ನಿಯ ವಿವರಗಳನ್ನು ನೀಡಿದರು.ಕೂಟದಲ್ಲಿ ರಾಜ್ಯದ ವಿವಿಧೆಡೆಯಿಂದ ತಲಾ 30 ಪುರುಷ ಹಾಗೂ ಮಹಿಳಾ ತಂಡಗಳು ಪಾಲ್ಗೊಳ್ಳಲಿವೆ. ಒಟ್ಟು 1000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬಿ.ವಿ.ವಿ ಸಂಘದ ನಾಲ್ಕು ಕ್ರೀಡಾಕೂಟಗಳಲ್ಲಿ ಏಕಕಾಲದಲ್ಲಿ ಹಾಕಿ ಪಂದ್ಯಾಟಗಳು ನಡೆಯಲಿವೆ. ಕ್ರೀಡಾಪಟುಗಳಿಗೆ ಸುಸಜ್ಜಿತ ವಸತಿ, ಊಟ, ಶುದ್ಧ ಕುಡಿಯುವ ನೀರು, ವೈದ್ಯರಿಂದ ಪ್ರಥಮ ಚಿಕಿತ್ಸಾ ವ್ಯವಸ್ಥೆ ಹಾಗೂ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದರು.
ಅಕ್ಟೋಬರ್ 13ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿ ವರ್ಗ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿ.ವಿ.ವಿ ಸಂಘದ ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ, ಎಸ್.ಬಿ.ಪೂಜಾರ, ಪಿ.ಎಸ್.ಆಲೂರ ಹಾಜರಿದ್ದರು.