ಬೆಂಗಳೂರು/ತುಮಕೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಮುಂದುವರಿದಿದ್ದು, ಆಕಾಂಕ್ಷಿಗಳ ಪಟ್ಟಿಯಲ್ಲಿ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಹೆಸರು ಸೇರ್ಪಡೆಯಾಗಿದೆ.
ಜಿ. ಪರಮೇಶ್ವರ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದರು. ಅಂದಿನಿಂದ ಈ ಹುದ್ದೆಗೆ ಲಾಬಿ ಆರಂಭವಾಗಿದೆ.
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ನನಗೆ ಆಸಕ್ತಿ ಇಲ್ಲ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಲೋಕಸಭೆ ಚುನಾವಣೆ ದೃಷ್ಟಿಯಿಂದ ಈ ಹುದ್ದೆಯನ್ನು ಯುವಕರಿಗೆ ನೀಡಬೇಕು ಎಂದು ಕಿರಿಯರ ಬಣ ವಾದ ಮಂಡಿಸುತ್ತಿದೆ. ಸದ್ಯ ಕಾರ್ಯಾಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಹೆಸರನ್ನು ಮುಂದಿಟ್ಟುಕೊಂಡು ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್, ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ.
ನಾನೂ ಆಕಾಂಕ್ಷಿ: ಜಯಚಂದ್ರ
‘ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರು ಅವಕಾಶ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದು ಜಯಚಂದ್ರ ಹೇಳಿದರು.
‘ಬಹಳ ಚಿಕ್ಕವಯಸ್ಸಿನಲ್ಲಿಯೇ ಕಾಂಗ್ರೆಸ್ ಪಕ್ಷ ಸೇರಿದೆ. ಕಿರಿಯ ವಯಸ್ಸಿನಲ್ಲಿಯೇ ವಿಧಾನಸಭೆ ಪ್ರವೇಶ ಮಾಡಿದೆ. ಶಾಸಕ, ಸಚಿವನಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಅಂದಿನಿಂದ ಇಂದಿನವರೆಗೂ ಪಕ್ಷಕ್ಕೋಸ್ಕರ ದುಡಿದಿದ್ದೇನೆ’ ಎಂದು ತಿಳಿಸಿದರು.