ಬೆಳಗಾವಿ: ‘ಗುಂಡಿ ಮುಚ್ಚುವ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಲು ಅನುದಾನಕ್ಕಾಗಿ ಕಾಯಬಾರದು ಎನ್ನುವ ಉದ್ದೇಶದಿಂದ ಸಂಬಂಧಿಸಿದ ಅಧಿಕಾರಿಗಳಿಗೆ ಬ್ಲಾಂಕ್ ಚೆಕ್ಗಳನ್ನು ಕೊಡಲಾಗಿದೆ. ಹಾಗೆಂದು ಯಾರೂ ಬೋಗಸ್ ಬಿಲ್ ಮಾಡಬಾರದು’ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಸೂಚಿಸಿದರು.
ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದಾಗಿ ರಸ್ತೆ, ಸೇತುವೆ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗಿರುವ ಕುರಿತು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಭಾನುವಾರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಗುಂಡಿಗಳನ್ನು ಮುಚ್ಚುವ ಕಾಮಗಾರಿ ಎಷ್ಟೇ ಇದ್ದರೂ ತೆಗೆದುಕೊಳ್ಳಬೇಕು. ಎಷ್ಟೇ ಅನುದಾನ ಬೇಕಾದರೂ ಒದಗಿಸಲಾಗುವುದು. ಸೇತುವೆಗಳ ದುರಸ್ತಿಗೂ ಆದ್ಯತೆ ನೀಡಬೇಕು. ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ಕಾಮಗಾರಿಗಳ ಬಗ್ಗೆ ಫೋಟೊ ಸಮೇತ ದಾಖಲೆ ಇಟ್ಟುಕೊಂಡಿರಬೇಕು. ಇದರಿಂದ, ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡಲು ಸಹಕಾರಿಯಾಗುತ್ತದೆ’ ಎಂದು ತಿಳಿಸಿದರು.
ಎಲ್ಲ ತಾಲ್ಲೂಕುಗಳಿಗೂ ಹಂಚಿರಿ
‘ಅಧಿಕಾರಿಗಳು ಬೆಂಗಳೂರಿಗೆ ಬಂದು ಅಲೆಯುವುದನ್ನು ತಪ್ಪಿಸಲು ₹ 10 ಕೋಟಿವರೆಗಿನ ಕಾಮಗಾರಿಗಳಿಗೆ ಅನುಮೋದನೆ ನೀಡುವ ಅಧಿಕಾರವನ್ನು ಅವರಿಗೆ ನೀಡಲಾಗಿದೆ’ ಎಂದರು.
‘ಅಧಿಕಾರಿಗಳು ಮಳೆಗಾಲ ಮುಗಿಯುವವರೆಗೂ ಕೇಂದ್ರ ಸ್ಥಾನ ಬಿಡಬಾರದು. ಮರಗಳು ಬಿದ್ದ ಕೂಡಲೇ ತೆರವುಗೊಳಿಸಬೇಕು’ ಎಂದು ತಾಕೀತು ಮಾಡಿದರು.
‘ಜಿಲ್ಲಾಧಿಕಾರಿ ಖಾತೆಯಲ್ಲಿರುವ ₹ 5 ಕೋಟಿ ಸಿಆರ್ಎಫ್ ಅನುದಾನವನ್ನು ಎಲ್ಲ 14 ತಾಲ್ಲೂಕುಗಳಿಗೂ ರಸ್ತೆಗಳ ಸುಧಾರಣೆ ಕಾಮಗಾರಿಗೆ ಹಂಚಿಕೆ ಮಾಡಬೇಕು. ಜಿಲ್ಲಾ ರಸ್ತೆಗಳಿಂದ ರಾಜ್ಯ ಹೆದ್ದಾರಿಗೆ ಮೇಲ್ದರ್ಜೆಗೆ ಏರಿಸಬೇಕಿದ್ದರೆ, ನಗರದಲ್ಲಿರುವ ರಸ್ತೆಯನ್ನು ಇಲಾಖೆ ವ್ಯಾಪ್ತಿಗೆ ಸೇರಿಸಬೇಕಾದರೆ ಪ್ರಸ್ತಾವ ಸಲ್ಲಿಸಬೇಕು’ ಎಂದು ತಿಳಿಸಿದರು.
ಚುನಾವಣೆಯಲ್ಲಿ ತೊಂದರೆಯಾಯ್ತು
ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ, ‘ಕರ್ನಾಟಕ ಗಡಿಯಲ್ಲಿರುವ ಚಂದೂರಟೇಕ್– ಟಾಕಳಿ ನಡುವಿನ ಸೇತುವೆ ನಿರ್ಮಾಣ ಕಾಮಗಾರಿಗೆ 2014ರಲ್ಲಿಯೇ ಚಾಲನೆ ನೀಡಲಾಗಿದೆ. ಆದರೆ, ಈವರೆಗೂ ಪೂರ್ಣಗೊಂಡಿಲ್ಲ. ಇದರಿಂದಾಗಿ, ಹೋದ ಚುನಾವಣೆಯಲ್ಲಿ ನಮಗೆ ಬಹಳ ಸಮಸ್ಯೆಯಾಯಿತು. ಜನರು ಮತ ಹಾಕುವುದಕ್ಕೆ ಬರಲಿಲ್ಲ. ಅಂತೆಯೇ ಕಲ್ಲೋಳ–ಯಡೂರ ಸೇರಿದಂತೆ ನಾಲ್ಕು ಸೇತುವೆಗಳಿಗೆ ಪೂಜೆ ಮಾಡಲಾಗಿದೆ. ಆದರೆ, ಕಾಮಗಾರಿ ಆರಂಭವಾಗಿಲ್ಲ’ ಎಂದು ದೂರಿದರು.
ಪ್ರತಿಕ್ರಿಯಿಸಿದ ಅಧಿಕಾರಿಗಳು, ‘ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ. 2 ವರ್ಷದಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ ಆಗಿಲ್ಲ. ಹೀಗಾಗಿ ಗುತ್ತಿಗೆದಾರರಿಗೆ ನೋಟಿಸ್ ಕೊಡಲಾಗಿದೆ’ ಎಂದು ತಿಳಿಸಿದರು.
‘ನೀವು ಗುತ್ತಿಗೆದಾರರಿಗೆ ಅಡಿಯಾಳಾಗಿದ್ದೀರೋ, ನಿಯಮದ ಪ್ರಕಾರ ಕೆಲಸ ಮಾಡುತ್ತೀರೋ? ಗುತ್ತಿಗೆದಾರರಿಗೆ ಅಂತಿಮ ನೋಟಿಸ್ ಕೊಟ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಅಲ್ಪಾವಧಿ ಟೆಂಡರ್ ನಡೆಸಿ, ಹೊಸ ಗುತ್ತಿಗೆ ಕೊಡಬೇಕು’ ಎಂದು ಸೂಚಿಸಿದರು.
ಪ್ರಸ್ತಾವ ಸಲ್ಲಿಸಿ
ಗ್ರಾಮೀಣ ಮತ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ‘ಕ್ಷೇತ್ರದ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆಗಳು ಹದಗೆಟ್ಟಿವೆ. ದುರಸ್ತಿಗೆ ಅನುದಾನ ನೀಡಬೇಕು’ ಎಂದು ಕೋರಿದರು. ಸ್ಪಂದಿಸಿದ ಸಚಿವರು, ‘ಮೊದಲು ರಸ್ತೆಗಳ ಗುಂಡಿ ಮುಚ್ಚಲು ಕ್ರಮ ತೆಗೆದುಕೊಳ್ಳಲಾಗುವುದು. ಪಕ್ಕಾ ರಸ್ತೆಗಳ ನಿರ್ಮಾಣಕ್ಕೆ ಪ್ರತ್ಯೇಕ ಪ್ರಸ್ತಾವ ಸಲ್ಲಿಸಿದರೆ ಅನುದಾನ ನೀಡಲಾಗುವುದು’ ಎಂದು ಭರವಸೆ ನೀಡಿದರು.
ಬೆಳಗಾವಿ ಸಂಸದ ಸುರೇಶ ಅಂಗಡಿ ಮಾತನಾಡಿ, ‘ಕಾಮಗಾರಿಗಳ ಗುತ್ತಿಗೆಯನ್ನು ಹೊರರಾಜ್ಯದವರ ಬದಲಿಗೆ ಸ್ಥಳೀಯರಿಗೆ ನೀಡಬೇಕು. ತ್ವರಿತಗತಿಯಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು’ ಎಂದು ಕೋರಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರತಿ ವರ್ಷ ಅಧಿವೇಶನ ನಡೆಯುತ್ತಿರುವುದರಿಂದ ಶಾಸಕರಿಗೆ ವಸತಿ ಕಲ್ಪಿಸಲು ಶಾಸಕರ ಭವನದ ನಿರ್ಮಾಣದ ಅಗತ್ಯವಿದೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಶಾಸಕರಾದ ದುರ್ಯೋಧನ ಐಹೊಳೆ, ಅನಿಲ ಬೆನಕೆ, ಮಹಾದೇವಪ್ಪ ಯಾದವಾಡ, ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಲ್ಲಾ ಪಂಚಾಯ್ತಿ ಸಿಇಒ ಆರ್. ರಾಮಚಂದ್ರನ್, ಪೊಲೀಸ್ ಆಯುಕ್ತ ಡಿ.ಸಿ. ರಾಜಪ್ಪ, ಎಸ್ಪಿ ಸುಧೀರಕುಮಾರ್ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಬಿ. ಬೂದೆಪ್ಪ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.