ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡೀಗಢ |ಸೌಂದರ್ಯವರ್ಧಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 1 ಸಾವು, 31 ಮಂದಿಗೆ ಗಾಯ

Published 2 ಫೆಬ್ರುವರಿ 2024, 15:59 IST
Last Updated 2 ಫೆಬ್ರುವರಿ 2024, 15:59 IST
ಅಕ್ಷರ ಗಾತ್ರ

ಶಿಮ್ಲಾ/ಚಂಡೀಗಢ: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಬಡ್ಡಿ ಕೈಗಾರಿಕಾ ಪ್ರದೇಶದ ಸೌಂದರ್ಯವರ್ಧಕ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ 2:45 ರ ಸುಮಾರಿಗೆ ಅಗ್ನಿ ಅವಘಡ ಸಂಭವಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದು, 31 ಮಂದಿ ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ಐದು ಮಂದಿಯನ್ನು ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಶನ್ ಆ್ಯಂಡ್‌ ರಿಸರ್ಚ್ (PGIMER)ಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸೋಲನ್ ಜಿಲ್ಲೆಯ ಬಡ್ಡಿ ನಿವಾಸಿಗಳಾದ ಚರಣ್ ಸಿಂಗ್ (22), ಪ್ರೇಮ ಕುಮಾರಿ (27), ಆರತಿ (25) ಮತ್ತು ಗೀತಾ (25) ಎಂಬುವವರಿಗೆ ‌ಸುಟ್ಟಗಾಯಗಳಾಗಿದ್ದು, ಬೆನ್ನುಮೂಳೆ ಹಾಗೂ ತಲೆಗೆ ಗಾಯಗಳಾಗಿವೆ. ಇವರಿಗೆ ಅಗತ್ಯವಿರುವ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಂಸ್ಥೆಯ ಅಧೀಕ್ಷಕ ವಿಪಿನ್ ಕೌಶಲ್ ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡಾಗ 50ಕ್ಕೂ ಹೆಚ್ಚು ಮಂದಿ ಕಾರ್ಖಾನೆಯಲ್ಲಿದ್ದರು ಎಂದು ಸೋಲನ್ ಉಪ ಆಯುಕ್ತ ಮನಮೋಹನ್ ಶರ್ಮಾ ತಿಳಿಸಿದ್ದಾರೆ.

ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಕಟ್ಟಡದ ಮೊದಲ ಮತ್ತು ಎರಡನೇ ಮಹಡಿಯಿಂದ ಜಿಗಿದಿದ್ದಾರೆ. ಇದರಿಂದ ಕೈ, ಕಾಲುಗಳು ಮತ್ತು ಬೆನ್ನುಮೂಳೆ ಮುರಿದಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕೆಲವರು ತಮ್ಮ ಮನೆಗಳಿಗೆ ಓಡಿಹೋಗಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಶರ್ಮಾ ಹೇಳಿದ್ದಾರೆ.

ಸೌಂದರ್ಯವರ್ಧಕಗಳಿಂದ ದಟ್ಟವಾದ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಬೆಂಕಿ ನಂದಿಸುವ ಕಾರ್ಯಾಚರಣೆಗೆ ಅಡಚಣೆ ಉಂಟಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT