ಶಹಜಹಾನ್ಪುರ (ಉತ್ತರ ಪ್ರದೇಶ): ಉತ್ತರಾಖಂಡದ ಪೂರ್ಣಗಿರಿ ದೇವಸ್ಥಾನಕ್ಕೆ ತೆರಳುತ್ತಿದ್ದ ಬಸ್ಗೆ ಟ್ರಕ್ವೊಂದು ಡಿಕ್ಕಿಯಾದ ಪರಿಣಾಮ ಬಸ್ನಲ್ಲಿದ್ದ 11 ಯಾತ್ರಾರ್ಥಿಗಳು ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಶಹಜಹಾನ್ಪುರದ ಹಾಜಿಯಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ರಸ್ತೆ ಬದಿಯ ಉಪಾಹಾರ ಗೃಹದ ಬಳಿ ಬಸ್ ನಿಲ್ಲಿಸಲಾಗಿತ್ತು. ಕೆಲ ಯಾತ್ರಾರ್ಥಿಗಳು ಊಟಕ್ಕೆಂದು ತೆರಳಿದ್ದರೆ, ಕೆಲವರು ಬಸ್ನಲ್ಲೇ ಕಾಯುತ್ತಿದ್ದರು. ಈ ವೇಳೆ ಜಲ್ಲಿಕಲ್ಲು ತುಂಬಿದ್ದ ಟ್ರಕ್ವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಸ್ ಮೇಲೆ ಬಿದ್ದಿದೆ.
ಸ್ಥಳೀಯ ಪೊಲೀಸರು ಮತ್ತು ಗ್ರಾಮಸ್ಥರು ಬಸ್ಸಿನೊಳಗೆ ಸಿಲುಕಿದ್ದ ಕೆಲ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ 11 ಜನ ಮೃತಪಟ್ಟಿದ್ದರೆ ಉಳಿದ 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.