ನವದೆಹಲಿ: 2011ರಿಂದ ಈಚೆಗೆ ದೇಶದಲ್ಲಿ ಕೇಂದ್ರದ ಸಶಸ್ತ್ರ ಪೊಲೀಸ್ ಪಡೆ, ದಿ ಅಸ್ಸಾಂ ರೈಫಲ್ಸ್ ಮತ್ತು ರಾಷ್ಟ್ರೀಯ ಭದ್ರತಾ ಪಡೆಯ 1,532 ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ಮಂಗಳವಾರ ಲೋಕಸಭೆಗೆ ತಿಳಿಸಿದ್ದಾರೆ.
ವ್ಯವಸ್ಥೆಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಯಾವುದೇ ವರದಿ ಇಲ್ಲ ಎಂದು ಅವರು ಹೇಳಿದ್ದಾರೆ.
‘2011ರಿಂದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್), ಅಸ್ಸಾಂ ರೈಫಲ್ಸ್ ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿಯಿಂದ ಒಟ್ಟು 1,532 ಆತ್ಮಹತ್ಯೆ ಪ್ರಕರಣಗಳು ನಡೆದಿವೆ’ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಈ ಸಂಬಂಧಿತ ಅಪಾಯಕಾರಿ ಅಂಶಗಳು ಮತ್ತು ಗುಂಪುಗಳನ್ನು ಗುರುತಿಸಲು ಕಾರ್ಯಪಡೆಯನ್ನು ರಚಿಸಲಾಗಿದೆ. ಅಲ್ಲದೆ ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್ನಲ್ಲಿ ಆತ್ಮಹತ್ಯೆಗಳನ್ನು ತಡೆಗಟ್ಟಲು ಪರಿಹಾರ ಕ್ರಮಗಳನ್ನು ಸೂಚಿಸುವಂತೆ ತಿಳಿಸಲಾಗಿದೆ ಎಂದು ರೈ ಹೇಳಿದರು.
ಕಾರ್ಯಪಡೆಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದರು.