ನವದೆಹಲಿ:2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಕೇಂದ್ರದ ಮಾಜಿ ಸಚಿವ ಎ.ರಾಜಾ ಹಾಗೂ ಇತರರನ್ನು ದೋಷಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿರುವಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ.ಡಿ), ಅರ್ಜಿ ವಿಚಾರಣೆಯನ್ನು ಶೀಘ್ರವೇ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿವೆ.
ನ್ಯಾಯಮೂರ್ತಿ ಬ್ರಿಜೇಶ್ ಸೇಠಿ ಅರ್ಜಿ ವಿಚಾರಣೆ ನಡೆಸುವರು. ವಿಚಾರಣೆಯನ್ನು ಸೆ. 10ಕ್ಕೆ ನಿಗದಿಪಡಿಸಲಾಗಿದೆ.
2ಜಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಮಾಡಿದ ಆರೋಪದಿಂದ ಮುಕ್ತಗೊಂಡಿರುವ ಕಂಪನಿಯೊಂದು, ಇ.ಡಿ ಜಪ್ತಿ ಮಾಡಿರುವ ₹ 22 ಕೋಟಿ ಮೌಲ್ಯದ ತನ್ನ ಆಸ್ತಿಯನ್ನು ತನಗೆ ಮರಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆಯೂ ಸೆ. 10ರಂದು ನಡೆಯಲಿದೆ.
ಹಗರಣಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ ಎ.ರಾಜಾ, ಡಿಎಂಕೆ ಸಂಸದೆ ಕನಿಮೋಳಿ ಹಾಗೂ ಇತರರ ವಿರುದ್ಧ ಸಿಬಿಐ ಹಾಗೂ ಇ.ಡಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದವು. ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ ಎಲ್ಲರನ್ನು 2017ರ ಡಿಸೆಂಬರ್ 21ರಂದು ದೋಷಮುಕ್ತಗೊಳಿಸಿ ತೀರ್ಪು ನೀಡಿತ್ತು.