ಸೋನ್ಭದ್ರ: ಉತ್ತರಪ್ರದೇಶದ ಸೋನ್ಭದ್ರ ಜಿಲ್ಲೆಯಲ್ಲಿ ಬಡವರು ಮತ್ತು ಬುಡಕಟ್ಟು ಜನರಿಗೆ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಆರೋಪದ ಮೇಲೆ 42 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಪೈಕಿ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತರ ಬಳಿಯಿದ್ದ ಲ್ಯಾಪ್ಟಾಪ್ಗಳು, ಭಾರಿ ಪ್ರಮಾಣದ ಪ್ರಚಾರದ ವಸ್ತುಗಳು, ಧಾರ್ಮಿಕ ಪುಸ್ತಕಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ ತಮಿಳುನಾಡಿನ ಚೆನ್ನೈ, ಉತ್ತರಪ್ರದೇಶದ ರಾಬರ್ಟ್ಗಂಜ್ ಹಾಗೂ ಆಂಧ್ರಪ್ರದೇಶ ಮೂಲದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ವ್ಯಕ್ತಿಗಳು ಬುಡಕಟ್ಟು ಜನರು ಮತ್ತು ಬಡವರಿಗೆ ಆಮಿಷಗಳನ್ನು ಒಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿತ್ತು. ಈ ಪ್ರಕಾರ ಆರೋಪಿಗಳ ವಿರುದ್ಧ ಉತ್ತರಪ್ರದೇಶದಲ್ಲಿ ಜಾರಿಯಲ್ಲಿರುವ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದಿದ್ದಾರೆ.