ಲಖನೌ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಸ್ವಕ್ಷೇತ್ರ ಅಮೇಠಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಮಂಗಳವಾರ ಮತ್ತೆ ಘರ್ಷಣೆ ನಡೆದಿದೆ.
ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಬರೆದಿದ್ದ ಫಲಕಗಳು ಮತ್ತು ಬ್ಯಾನರ್ಗಳನ್ನು ಹಿಡಿದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಪ್ರಮುಖ ಮಾರುಕಟ್ಟೆ ಪ್ರದೇಶದಲ್ಲಿ ಸೇರಿದ್ದರಿಂದ ಗೌರಿಗಂಜ್ನಲ್ಲಿ ಆಯೋಜಿಸಲಾಗಿದ್ದ ಸಭೆಯನ್ನು ರಾಹುಲ್ ಗಾಂಧಿ ರದ್ದುಗೊಳಿಸಿದರು.
ನಂತರ ಸ್ಥಳಕ್ಕೆ ಬಂದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಬೆಂಬಲಿಗರೊಂದಿಗೆ ಘರ್ಷಣೆಯಲ್ಲಿ ತೊಡಗಿದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು ಎಂದು ಮೂಲಗಳು ತಿಳಿಸಿವೆ.
ಜಗದೀಶಪುರದಲ್ಲೂ ಎರಡೂ ಪಕ್ಷಗಳ ಕಾರ್ಯಕರ್ತರು ಕೈ–ಕೈ ಮಿಲಾಯಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಆದರೂ ರಾಹುಲ್ ಅವರು ತಮ್ಮ ಲೋಕಸಭಾ ಕ್ಷೇತ್ರದ ಜೈಸ್, ಮುಸಾಫಿರ್ಖಾನಾ ಮತ್ತು ಇತರ ಸ್ಥಳಗಳಲ್ಲಿ ಮತದಾರರನ್ನು ಭೇಟಿಯಾಗಿದ್ದಾರೆ.
ಎರಡು ದಿನಗಳ ಭೇಟಿಗಾಗಿ ಅವರು ಸೋಮವಾರ ಅಮೇಠಿಗೆ ಬಂದಿದ್ದರು.
ರಾಯಬರೇಲಿ ಜಿಲ್ಲೆಯ ಸಲೋನ್ಗೆ ರಾಹುಲ್ ಸೋಮವಾರ ಭೇಟಿ ನೀಡಿದ್ದ ಸಂದರ್ಭದಲ್ಲೂ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ಸಂಬಂಧ ಪೊಲೀಸರು ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.