ನವದೆಹಲಿ: ಕಾಂಗ್ರೆಸ್ ಜತೆಗಿನ ಸಂಬಂಧ ಕುರಿತು ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಜತೆಗೆ ಭಿನ್ನಾಭಿಪ್ರಾಯಗಳಿದ್ದರೂ ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಸಿಪಿಎಂ ಪಾಲಿಟ್ ಬ್ಯೂರೊ ಸದಸ್ಯ ಪ್ರಕಾಶ್ ಕಾರಟ್ ತಿಳಿಸಿದ್ದಾರೆ.
ಸಿಪಿಐ(ಎಂ)ನ ಮುಖವಾಣಿ ‘ಪೀಪಲ್ಸ್ ಡೆಮಾಕ್ರಸಿ’ಗೆ ಬರೆದ ಲೇಖನದಲ್ಲಿ ಕಾರಟ್ ಈ ವಿಷಯ ಸ್ಪಷ್ಟಪಡಿಸಿದ್ದಾರೆ. ಪಕ್ಷದಲ್ಲಿ ಭಿನ್ನಮತ ಉಂಟಾಗಿದೆ ಎಂದು ಮಾಧ್ಯಮಗಳು ಬಿಂಬಿಸಿವೆ ಎಂದು ಅವರು ಟೀಕಿಸಿದ್ದಾರೆ.
ಬಿಜೆಪಿ ವಿರುದ್ಧ ಹೋರಾಡಲು ಕಾಂಗ್ರೆಸ್ ಸೇರಿದಂತೆ ಜಾತ್ಯತೀತ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಿಳಿಸಿದ್ದರು.
ಆದರೆ ಪಕ್ಷದ ಕೇಂದ್ರ ಸಮಿತಿ ಇದನ್ನು ತಿರಸ್ಕರಿಸಿತ್ತು. ನಂತರ ಯೆಚೂರಿ ಮತ್ತು ಕಾರಟ್ ಮಾಧ್ಯಮಗಳ ಜತೆ ಸಂವಾದ ನಡೆಸುವಾಗ ಭಿನ್ನವಾದ ಹೇಳಿಕೆ ನೀಡಿದ್ದರು.
ಬಿಜೆಪಿ–ಆರ್ಎಸ್ಎಸ್ ಬೆಳವಣಿಗೆಗೆ ಹೆಚ್ಚು ಅವಕಾಶ ನೀಡದಿರಲು ಪಕ್ಷ ಸೂಕ್ತ ಯೋಜನೆ ರೂಪಿಸುವುದು ಅಗತ್ಯ ಎಂದು ಕಾರಟ್ ವಿವರಿಸಿದ್ದಾರೆ.