ಖನ್ನಾ (ಪಂಜಾಬ್): ಮುುಂಬರುವ ಲೋಕಸಭೆಯಲ್ಲಿ ಪಂಜಾಬ್ನಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲುವ ಗುರಿ ಇರಿಸಿಕೊಂಡಿರುವ ಆಮ್ ಆದ್ಮಿ ಪಕ್ಷವು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಮುಂದಾಗಿದೆ.
ಈ ಕುರಿತು ಮಾಹಿತಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಂದಿನ ಎರಡು ವಾರದೊಳಗೆ ಪಂಜಾಬ್ ಹಾಗೂ ಚಂಡೀಗಢ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಪಂಜಾಬ್ನಲ್ಲಿ 13 ಹಾಗೂ ಚಂಡೀಗಢದಲ್ಲಿ ಒಂದು ಲೋಕಸಭೆ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಎರಡು ವರ್ಷಗಳ ಹಿಂದೆ ನೀವು ನಮ್ಮನ್ನು ಆಶೀರ್ವದಿಸಿದ್ದೀರಿ. ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92ರಲ್ಲಿ ಗೆದ್ದು ಇತಿಹಾಸ ನಿರ್ಮಿಸಿದ್ದೆವು. ಈಗ ಮತ್ತೊಮ್ಮೆ ಜನಾದೇಶ ನೀಡಲು ಕೈ ಮುಗಿದು ಬೇಡಿಕೊಳ್ಳುತ್ತೇವೆ. ಎಎಪಿ ಎಲ್ಲ 14 ಸ್ಥಾನಗಳಲ್ಲೂ ಜಯ ಗಳಿಸಲಿದೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.