ನವದೆಹಲಿ: ಎಎಪಿಯ ಪಂಜಾಬ್ನ ಏಕೈಕ ಸಂಸದ ಸುಶೀಲ್ ಕುಮಾರ್ ರಿಂಕು ಅವರು ಪಕ್ಷದ ಶಾಸಕ ಶೀತಲ್ ಅಂಗುರಲ್ ಜತೆ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡರು.
ರಿಂಕು ಅವರು ಜಲಂಧರ್ ಕ್ಷೇತ್ರದ ಸಂಸದರಾಗಿದ್ದಾರೆ. ಶೀತಲ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಇವರು ಪಕ್ಷಕ್ಕೆ ಸೇರಿದರು.
‘ಪಂಜಾಬ್ನ ಅಭಿವೃದ್ಧಿಗಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ’ ಎಂದಿರುವ ರಿಂಕು ಅವರು, ರಾಜ್ಯದ ಎಎಪಿ ಸರ್ಕಾರವು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿದರು.
ರಿಂಕು ಅವರು ಕಳೆದ ವರ್ಷ ಕಾಂಗ್ರೆಸ್ ತೊರೆದು ಎಎಪಿಗೆ ಸೇರಿದ್ದರು. ಬಳಿಕ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಜಯ ಗಳಿಸಿದ್ದರು. ಸಂಸತ್ ಅಧಿವೇಶನದ ವೇಳೆ ಪ್ರತಿಭಟನೆ ನಡೆಸಿ ಅಶಿಸ್ತು ತೋರಿದ್ದ ಆರೋಪದಲ್ಲಿ ಅಮಾನತುಗೊಂಡಿದ್ದ ಸಂಸದರಲ್ಲಿ ಇವರೂ ಒಬ್ಬರಾಗಿದ್ದಾರೆ.