ಮುಂಬೈ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಏಕನಾಥ ಶಿಂದೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಶನಿವಾರ ಆಗ್ರಹಿಸಿದ್ದಾರೆ.
ಶಿವಸೇನಾ ಪಕ್ಷದ ಉದ್ಧವ್ ಠಾಕ್ರೆ ಬಣದ (ಯುಬಿಟಿ) ನಾಯಕ ವಿನೋದ್ ಘೋಸಲ್ಕರ್ ಅವರ ಪುತ್ರ ಅಭಿಷೇಕ್ ಅವರ ಹತ್ಯೆ ಪ್ರಕರಣವನ್ನುದ್ದೇಶಿಸಿ ಠಾಕ್ರೆ ಮಾತನಾಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಮೌರಿಸ್ ನೊರೊನ್ಹಾ ಎಂಬಾತ ಅಭಿಷೇಕ್ ಅವರನ್ನು ಫೆಬ್ರುವರಿ 8ರಂದು 'ಫೇಸ್ಬುಕ್ ಲೈವ್' ವೇಳೆ ಗುಂಡಿಕ್ಕಿ ಹತ್ಯೆ ಮಾಡಿದ್ದ. ಬಳಿಕ ತಾನೂ ಗುಂಡು ಹೊಡೆದುಕೊಂಡಿದ್ದ ಎನ್ನಲಾದ ಪ್ರಕರಣದಲ್ಲಿ ಮೂರನೆಯವರ ಪಾತ್ರವಿದೆಯೇ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಠಾಕ್ರೆ ಒತ್ತಾಯಿಸಿದ್ದಾರೆ.
ಬಾಂದ್ರಾದಲ್ಲಿರುವ ತಮ್ಮ ನಿವಾಸ 'ಮಾತೋಶ್ರೀ'ಯಲ್ಲಿ ಮಾತನಾಡಿರುವ ಅವರು, 'ಅವರಿಂದ (ಏಕನಾಥ ಶಿಂದೆ ನೇತೃತ್ವದ ಸರ್ಕಾರದಿಂದ) ರಾಜ್ಯ ಮುನ್ನಡೆಸಲು ಸಾಧ್ಯವಿಲ್ಲ. ಸರ್ಕಾರವನ್ನು ವಜಾಗೊಳಿಸಿ, ರಾಷ್ಪ್ರಪತಿ ಆಡಳಿತ ಜಾರಿಗೊಳಿಸಬೇಕು ಮತ್ತು ಹೊಸದಾಗಿ ವಿಧಾನಸಭೆ ಚುನಾವಣೆ ಘೋಷಿಸುವ ಅಗತ್ಯವಿದೆ' ಎಂದು ಹೇಳಿದ್ದಾರೆ.