ಬೆಂಗಳೂರು: ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರಿಗೆ ಮಾತನಾಡಲು ಸ್ಪೀಕರ್ ಓಂ ಬಿರ್ಲಾ ಅವರು ಅವಕಾಶ ನೀಡುತ್ತಿಲ್ಲ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ದೂರಿದ್ದಾರೆ.
ಟ್ವೀಟ್ ಮೂಲಕ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ಈ ಟ್ವೀಟ್ಗಾಗಿ ತಾವು ಜೈಲಿಗೆ ಹೋಗಲು ಸಿದ್ಧ ಎಂದು ಬರೆದುಕೊಂಡಿದ್ದಾರೆ.
‘ಕಳೆದ ಮೂರು ದಿನಗಳಿಂದ ಸ್ಪೀಕರ್ ಓಂ ಬಿರ್ಲಾ ಅವರು ಬಿಜೆಪಿ ಸಚಿವರಿಗೆ ಮಾತ್ರ ಮೈಕ್ನಲ್ಲಿ ಮಾತನಾಡಲು ಅವಕಾಶ ಕೊಡುತ್ತಿದ್ದಾರೆ. ವಿರೋಧ ಪಕ್ಷಗಳ ಒಬ್ಬನೇ ಒಬ್ಬ ಸದಸ್ಯರಿಗೆ ಮಾತನಾಡಲು ಅವಕಾಶ ನೀಡದೆ ಸದನವನ್ನು ಮುಂದೂಡುತ್ತಿದ್ದಾರೆ‘ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last 3 days saw speaker @ombirlakota allow ONLY BJP ministers to speak on mike & then adjourn parliament with not single opposition member being allowed to speak. Democracy IS under attack. And the speaker leads from the front. And I am willing to go to jail for this tweet.
‘ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಇದಕ್ಕೆ ಸ್ಪೀಕರ್ ನಾಯಕತ್ವ ವಹಿಸಿದ್ದಾರೆ. ಈ ಟ್ವೀಟ್ ಮಾಡಿದ್ದಕ್ಕಾಗಿ ನಾನು ಜೈಲಿಗೆ ಹೋಗಲೂ ಸಿದ್ಧ‘ ಎಂದು ಅವರು ಬರೆದುಕೊಂಡಿದ್ದಾರೆ.
ಈ ಹಿಂದೆ ಕೂಡ ಮೊಯಿತ್ರಾ ಅವರು ಮಾಧ್ಯಮಗಳ ಎದುರು ಸ್ಪೀಕರ್ ವಿರುದ್ಧ ಬಹಿರಂಗ ಅಸಮಾಧಾನ ತೋಡಿಕೊಂಡಿದ್ದರು.
ಉಭಯ ಸದನಗಳಲ್ಲಿ ಅದಾನಿ ವಿವಾದ ಸಂಬಂಧ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ಮಾತಿನ ಸಮರವೇ ನಡೆಯುತ್ತಿದೆ. ವಿವಾದ ಸಂಬಂಧ ತಮಗೆ ಮಾತನಾಡಲು ಅವಕಾಶ ಸಿಗುತ್ತಿಲ್ಲ ಎನ್ನುವುದು ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.