ನವದೆಹಲಿ: ಆಂಧ್ರಪ್ರದೇಶದಲ್ಲಿ ಭಾನುವಾರ ಸಂಭವಿಸಿದ ರೈಲು ದುರಂತಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ನೂತನ ರೈಲು ಯೋಜನೆಗಳಿಗೆ ಚಾಲನೆ ನೀಡುವಾಗ ತೋರಿಸುವ ಉತ್ಸಾಹವನ್ನು, ರೈಲ್ವೆ ಸುರಕ್ಷತೆ ಮತ್ತು ಪ್ರಯಾಣಿಕರ ಯೋಗಕ್ಷೇಮದ ಕುರಿತಾಗಿಯೂ ತೋರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂಬಂಧ ‘ಎಕ್ಸ್’ನಲ್ಲಿ ಟ್ವೀಟ್ ಮಾಡಿರುವ ಅವರು, ವಿಜಯನಗರ ಜಿಲ್ಲೆಯಲ್ಲಿ ನಡೆದ ರೈಲು ದುರಂತದ ಘಟನೆಯಲ್ಲಿ ಸಂಭವಿಸಿದ ಸಾವು ಮತ್ತು ಹಲವರು ಗಾಯಗೊಂಡಿರುವುದನ್ನು ತಿಳಿದು ಅತೀವ ದುಃಖವಾಯಿತು. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ.
ಈ ದುರಂತದಲ್ಲಿ ಸಂತ್ರಸ್ಥರಾದವರಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವು ಕಲ್ಪಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ರೈಲು ದುರಂತದಲ್ಲಿ ಸಂಭವಿಸಿದ ಸಾವು ಮತ್ತು ನೋವುಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮರುಕ ವ್ಯಕ್ತಪಡಿಸಿದ್ದಾರೆ.