ನವದೆಹಲಿ: ಕ್ಯಾನ್ಸರ್ಗೆ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ವಾರಾಂತ್ಯದ ವೇಳೆಗೆ ಸ್ವದೇಶಕ್ಕೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೇಟ್ಲಿ ಗುಣಮುಖರಾಗಿದ್ದು, ವೈದ್ಯರ ಸಲಹೆಯಂತೆ ಅವರು ಭಾರತಕ್ಕೆ ಮರಳಲಿದ್ದಾರೆ. ಮುಂದಿನ ವಾರದಿಂದ ಪ್ರಾರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿಯೂ ಅವರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಪೀಯೂಷ್ ಗೋಯಲ್ ಬಜೆಟ್ ಮಂಡಿಸಿದ ನಂತರ, ಅಮೆರಿಕದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಜೇಟ್ಲಿ, ‘ವೈದ್ಯರು ಸ್ವದೇಶಕ್ಕೆ ತೆರಳಲು ಅನುಮತಿ ನೀಡಿದರೆ, ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳುವುದಲ್ಲದೆ, ಬಜೆಟ್ ಕುರಿತ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದೇನೆ’ ಎಂದು ತಿಳಿಸಿದ್ದರು.
ಜೇಟ್ಲಿ ಅನುಪಸ್ಥಿತಿಯಲ್ಲಿ ಪೀಯೂಷ್ ಗೋಯಲ್ ಈ ವರ್ಷದ ಕೇಂದ್ರ ಬಜೆಟ್ ಮಂಡಿಸಿದ್ದರು. ಜೇಟ್ಲಿ ಹಿಂದಿರುಗಿದ ನಂತರ, ಅವರಿಗೇ ಹಣಕಾಸು ಖಾತೆ ನೀಡಲಾಗುತ್ತದೆಯೇ ಎಂಬ ಕುರಿತು ಯಾವುದೇ ಮಾಹಿತಿ ಇಲ್ಲ ಎಂದೂ ಮೂಲಗಳು ತಿಳಿಸಿವೆ.