ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿರುವ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯ ಇಬ್ಬರು ಪ್ರಭಾವಿ ಮುಖಂಡರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ.
ಶಹಜಾನಪುರ್ ಬೆಜೆಪಿ ಶಾಸಕ ರೋಷನ್ ಲಾಲ್ ವರ್ಮಾ ಅವರು ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ. ಅವರು ಸಮಾಜವಾದಿ ಪಕ್ಷ ಸೇರುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗಿದೆ.
ಬೆಳಿಗ್ಗೆಯಷ್ಟೇ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಬಿಜೆಪಿ ತೊರೆಯವುದಾಗಿ ಘೋಷಿಸಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿರುವರೋಷನ್ ಲಾಲ್ ವರ್ಮಾ ಜನವರಿ 14 ರ ವೇಳೆಗೆ ಇನ್ನೂ ಹಲವು ಸಚಿವರು, ಶಾಸಕರು ಬಿಜೆಪಿ ತೊರೆಯುತ್ತಾರೆ. ಆ ನಂತರ ಸ್ಷಷ್ಟ ಚಿತ್ರಣ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ಇನ್ನು ಟ್ವೀಟ್ ಮಾಡಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು, ಬಿಜೆಪಿ ತೊರೆದಿರುವ ಈ ಇಬ್ಬರೂ ನಾಯಕರು ಎಸ್ಪಿ ಸೇರಲಿದ್ದಾರೆ ಎಂದು ಹೇಳಿದ್ದಾರೆ.
ಇನ್ನೊಂದೆಡೆ ನವದೆಹಲಿಯಲ್ಲಿ ಬಿಜೆಪಿ ನಾಯಕರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಟಿಕೆಟ್ ಹಂಚಿಕೆಗಾಗಿ ಇಂದು ಸಭೆ ನಡೆಸುತ್ತಿದ್ದಾರೆ.