ಶ್ರೀನಗರ: ಸಂವಿಧಾನದ 370ನೇ ವಿಧಿಯಡಿ ಜಮ್ಮು–ಕಾಶ್ಮೀರಕ್ಕೆ ಕಲ್ಪಿಸಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರ ಸರ್ಕಾರದ ತೀರ್ಮಾನವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್, 2024ರ ಸೆಪ್ಟೆಂಬರ್ ಒಳಗಾಗಿ ಚುನಾವಣೆ ನಡೆಸಲು ನಿರ್ದೇಶಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ಆರಂಭಿಸಿವೆ.
ವಿಧಾನಸಭಾ ಚುನಾವಣೆಗೆ ಮುನ್ನುಡಿ ಎಂಬಂತೆ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯ ಸಾಧ್ಯತೆ ಕುರಿತು ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ಸಿದ್ಧತೆ ನಡೆಸಿದೆ ಎಂದೆನ್ನಲಾಗಿದೆ. ಕಾಂಗ್ರೆಸ್ ಮುಖಂಡ ಗುಲಾಮ್ ಅಹ್ಮದ್ ಮೀರ್ ಅವರು ಕಣಿವೆ ರಾಜ್ಯಕ್ಕೆ ಭೇಟಿ ನೀಡಿ ಸೀಟು ಹಂಚಿಕೆ ಕುರಿತು ವಿವಿಧ ಪಕ್ಷಗಳೊಂದಿಗೆ ಚರ್ಚೆ ನಡೆಸಿದ್ದಾರೆ.
‘ಜಮ್ಮು, ಕಾಶ್ಮೀರ ಹಾಗೂ ಲಡಾಕ್ ಪ್ರದೇಶದಲ್ಲಿರುವ ಒಟ್ಟು ಆರು ಲೋಕಸಭಾ ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವ ಭರವಸೆಯನ್ನು ಇಲ್ಲಿನ ಜನರು ನೀಡಿದ್ದಾರೆ’ ಎಂದು ಮೀರ್ ಅನಂತನಾಗ್ನಲ್ಲಿ ಹೇಳಿದ್ದಾರೆ.