ಇಟಾನಗರ(ಅರುಣಾಚಲ ಪ್ರದೇಶ): ಬಿಜೆಪಿ ಪಕ್ಷವು ಜಾತಿ, ಮತ ಮತ್ತು ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸುತ್ತಿದ್ದು, ಧರ್ಮ ಹಾಗೂ ಭಾಷೆಯ ಹೆಸರಿನಲ್ಲಿ ಜನರ ನಡುವೆ ವಿಷ ಬೀಜ ಬಿತ್ತುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮಹತ್ವಾಕಾಂಕ್ಷೆಯ ಭಾರತ ಜೋಡೊ ನ್ಯಾಯ ಯಾತ್ರೆ ಶನಿವಾರ ಅರುಣಾಚಲ ಪ್ರದೇಶವನ್ನು ಪ್ರವೇಶಿಸಿದ ಬಳಿಕ ಸ್ಥಳೀಯರೊಂದಿಗೆ ಸಂವಾದ ನಡೆಸುವ ವೇಳೆ, ‘ಬಿಜೆಪಿ ಸರ್ಕಾರ ಕೆಲವು ಉದ್ಯಮಿಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದು, ಕಷ್ಟದಲ್ಲಿರುವ ಸಾಮಾನ್ಯ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಹೊಂದಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಜನರನ್ನು ಒಗ್ಗೂಡಿಸಿ, ಅವರಿಗೆ ಒಳಿತನ್ನು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ’ ಎಂದರು.
ಭಾರತ ಜೋಡೊ ನ್ಯಾಯ ಯಾತ್ರೆಯು ಈಶಾನ್ಯ ರಾಜ್ಯಗಳ ಜನರ ಸಂಕಷ್ಟಗಳನ್ನು ಆಲಿಸಿ, ಸ್ಥಳೀಯ ಸಮುದಾಯಗಳ ನಡುವೆ ಬಾಂಧವ್ಯ ವೃದ್ಧಿಸುವ ಗುರಿಯನ್ನು ಹೊಂದಿರುವುದಾಗಿ ರಾಹುಲ್ ತಿಳಿಸಿದರು.
‘ಕಾಂಗ್ರೆಸ್ ಪಕ್ಷವು ಈ ಹಿಂದೆ ಅರುಣಾಚಲ ಪ್ರದೇಶಕ್ಕೆ ರಾಜ್ಯ ಸ್ಥಾನಮಾನವನ್ನು ನೀಡಿದೆ. ಬಡವರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಏಳಿಗೆಗೆ ಶ್ರಮಿಸಿದೆ. ಯುವಕರು, ಮಹಿಳೆಯರು ಹಾಗೂ ಶೋಷಿತ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡಲು ಸದಾ ಸಿದ್ಧವಿದೆ’ ಎಂದು ರಾಹುಲ್ ಗಾಂಧಿ ಹೇಳಿದರು.
ದೇಶದಲ್ಲಿ ಉಂಟಾಗಿರುವ ನಿರುದ್ಯೋಗ ಸಮಸ್ಯೆಗೆ ಬಿಜೆಪಿ ಪಕ್ಷವೇ ನೇರ ಕಾರಣ ಎಂದು ಅವರು ದೂರಿದ್ದಾರೆ