ನವದೆಹಲಿ: 45 ಕಂಪನಿಗಳಿಂದ ಚುನಾವಣಾ ಬಾಂಡ್ಗಳ ಮೂಲಕ ₹400 ಕೋಟಿ ದೇಣಿಗೆ ಪಡೆಯಲು ಬಿಜೆಪಿಯು ಸಿಬಿಐ ಮತ್ತು ಜಾರಿ ನಿರ್ದೇಶನಾಲಯವನ್ನು (ಇ.ಡಿ) ದುರ್ಬಳಕೆ ಮಾಡಿಕೊಂಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಆರೋಪಿಸಿದರು.
ಪ್ರಜಾಪ್ರಭುತ್ವದ ಬಗ್ಗೆ ಕಾಳಜಿ ಇದ್ದರೆ ಈ ಕುರಿತು ಶ್ವೇತಪತ್ರ ಹೊರಡಿಸಲಿ ಎಂದರು.
ಕೇಂದ್ರೀಯ ತನಿಖಾ ಸಂಸ್ಥೆಗಳು ಶೋಧ ಕಾರ್ಯ ನಡೆಸಿದ ಬಳಿಕ ಮತ್ತೆ 15 ಕಂಪನಿಗಳು ಬಿಜೆಪಿಗೆ ದೇಣಿಗೆ ನೀಡಿರುವುದು ತನಿಖೆಯಲ್ಲಿ ಬಹಿರಂಗಗೊಂಡಿದೆ ಎಂಬ ಮಾಧ್ಯಮ ವರದಿಯನ್ನು ಅವರು ಉಲ್ಲೇಖಿಸಿದರು.
‘4 ಶೆಲ್ ಕಂಪನಿಗಳು ಕೂಡ ಬಿಜೆಪಿಗೆ ದೇಣಿಗೆ ನೀಡಿವೆ ಎಂದು ವರದಿಗಳು ಹೇಳಿವೆ. ಸರ್ವಾಧಿಕಾರಿ ಮೋದಿ ಸರ್ಕಾರವು ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಕೂಡ ಸ್ಥಗಿತಗೊಳಿಸಿತ್ತು’ ಎಂದು ಎಕ್ಸ್ ವೇದಿಕೆಯಲ್ಲಿ ಆರೋಪಿಸಿದರು.