ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಂತ ಜೇಬಿನಿಂದ ಬಡವರಿಗೆ ಉಚಿತ ಪಡಿತರ ನೀಡುತ್ತಿಲ್ಲ. ಆ ಕಾರಣಕ್ಕೆ ಬಿಜೆಪಿಗೆ ಮತ ಹಾಕಬೇಕು ಎಂದು ಬಡವರು ಭಾವಿಸಬೇಕಿಲ್ಲ ಎಂದು ಬಹುಜನ ಸಮಾಜವಾದಿ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರು ಭಾನುವಾರ ಪ್ರತಿಪಾದಿಸಿದರು.
ಹರಿಯಾಣದ ಕರ್ನಾಲ್ನಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ‘ಚುನಾವಣೆಯ ಸಮಯದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಮಂದಿ ಪ್ರತಿ ಹಳ್ಳಿಗೂ ಭೇಟಿ ನೀಡಿ, ಬಿಜೆಪಿ ಮತ್ತು ನರೇಂದ್ರ ಮೋದಿ ಉಚಿತ ಪಡಿತರ ನೀಡುತ್ತಿದ್ದಾರೆ ಎಂದು ಬಡವರ ನಡುವೆ ಪ್ರಚಾರ ಮಾಡುತ್ತಿದ್ದಾರೆ. ನೀವು ಬಿಜೆಪಿಗೆ ಮತ ಹಾಕುವ ಮೂಲಕ ಋಣ ತೀರಿಸಬೇಕು ಎಂದು ಹೇಳುತ್ತಿದ್ದಾರೆ. ಅದು ಜನರ ತೆರಿಗೆ ಹಣದಿಂದ ನೀಡುವ ಉಚಿತ ಪಡಿತರ’ ಎಂದು ಹೇಳಿದರು.
ಬಿಜೆಪಿ ಶ್ರೀಮಂತರ ಪಕ್ಷವಾಗಿದೆ ಮತ್ತು ಅದು ಬಡವರಿಗೆ, ದಲಿತರಿಗೆ, ಹಿಂದುಳಿದವರಿಗೆ ಏನನ್ನೂ ಮಾಡಿಲ್ಲ. ಬಡವರ ಸಮಸ್ಯೆಗಳು ಬಗೆಹರಿಯಬೇಕು ಎಂದರೆ, ಅವರಿಗೆ ಉದ್ಯೋಗ ನೀಡಬೇಕು. ತಮ್ಮ ಪಕ್ಷಕ್ಕೆ ಅವಕಾಶ ನೀಡಿದರೆ ಆ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದರು.