ಕೋಲ್ಕತ್ತಾ: ಬಿಜೆಪಿ ಬೆಂಬಲಿತ ಮಾಧ್ಯಮಗಳು ಅತಿಯಾದ ಪ್ರಚಾರ ನೀಡುತ್ತಿವೆ. ವಾಸ್ತವದಲ್ಲಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ದಾಟುವುದು ಕಷ್ಟಎಂದು ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿದ್ದಾರೆ. ಈ ನನ್ನ ಟ್ವೀಟ್ ಅನ್ನು ಸೇವ್ ಮಾಡಿ ಇಟ್ಟುಕೊಳ್ಳಿ, ಬಿಜೆಪಿ ಹೆಚ್ಚು ಸ್ಥಾನ ಗೆದ್ದರೆ ನಾನು ಈ ಟ್ವಿಟ್ಟರ್ವೇದಿಕೆಯಿಂದಲೇನಿರ್ಗಮಿಸುತ್ತೇನೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಕೇವಲ 5 ತಿಂಗಳು ಬಾಕಿ ಉಳಿದಿದ್ದು, ಈ ಮಧ್ಯೆ, ಹಲವು ಟಿಎಂಸಿ ಮುಖಂಡರು ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. ಕಳೆದ ಚುನಾವಣೆಯಲ್ಲಿ ಟಿಎಂಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸುವೇಂದು ಅಧಿಕಾರಿ ಸೇರಿದಂತೆ ಟಿಎಂಸಿ ತೊರೆದಿದ್ದ ಹಲವು ಶಾಸಕರು, ಸಂಸದರು ಮತ್ತು ಸ್ಥಳೀಯ ಮುಖಂಡರು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ವಾರಾಂತ್ಯದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದೇ ಕಾರ್ಯಕ್ರಮದಲ್ಲಿ, ಬಿಜೆಪಿ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದ ಅಮಿತ್ ಶಾ, ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 200 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದ್ದರು. ಅಮಿತ್ ಶಾ ಹೇಳಿಕೆ ಬೆನ್ನಲ್ಲೇ ಪ್ರಶಾಂತ್ ಕಿಶೋರ್ ಬಿಜೆಪಿ ಎರಡಂಕಿ ಸಹ ಗೆಲ್ಲುವುದಿಲ್ಲ ಎಂದು ಟ್ವೀಟ್ ಹಾಕಿದ್ದಾರೆ.
For all the hype AMPLIFIED by a section of supportive media, in reality BJP will struggle to CROSS DOUBLE DIGITS in #WestBengal
— Prashant Kishor (@PrashantKishor) December 21, 2020
PS: Please save this tweet and if BJP does any better I must quit this space!
ಇದೇವೇಳೆ, ಪ್ರಶಾಂತ್ ಕಿಶೋರ್ ಟ್ವೀಟ್ಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಚಡಪಡಿಕೆ ಆರಂಭವಾಗಿದೆ ಎಂಬರ್ಥದಲ್ಲಿ ಒಂದೇ ಪದದ ಟ್ವೀಟ್ ಮಾಡುವ ಮೂಲಕ ಉತ್ತರಿಸಿದ್ದಾರೆ.
Rattled .......!!!! https://t.co/GKPBiMxDhJ
— B L Santhosh (@blsanthosh) December 21, 2020
ಒಟ್ಟಿನಲ್ಲಿ, ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಶ್ಚಿಮ ಬಂಗಾಳಲ್ಲಿ ರಾಜಕೀಯ ಮೇಲಾಟಗಳು ಆರಂಭವಾಗಿವೆ. ಮಮತಾ ವರ್ಸಸ್ ಬಿಜೆಪಿ ಪೈಪೋಟಿ ನಡೆಯುವುದು ಬಹುತೇಕ ಖಚಿತವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.