ಲಖನೌ : ‘ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ’ ಎಂದು ಪಕ್ಷದ ಅಧ್ಯಕ್ಷೆ ಮಾಯಾವತಿ ಸೋಮವಾರ ಇಲ್ಲಿ ತಿಳಿಸಿದರು.
ಪಕ್ಷದ ಕಚೇರಿಯಲ್ಲಿ ನಡೆದ ತಮ್ಮ 68ನೇ ಜನ್ಮ ದಿನಾಚರಣೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಚುನಾವಣೋತ್ತರ ಮೈತ್ರಿಯ ಸಾಧ್ಯತೆಯನ್ನು ತಳ್ಳಿಹಾಕಲಿಲ್ಲ. ಮಾಧ್ಯಮಗಳಲ್ಲಿ ಪ್ರಕಟವಾದ ರಾಜಕೀಯ ನಿವೃತ್ತಿಯ ವರದಿಗಳನ್ನು ಅವರು ನಿರಾಕರಿಸಿದರು.
‘ಏಪ್ರಿಲ್–ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ. ಚುನಾವಣೆ ನಂತರ ಮೈತ್ರಿ ಬಗ್ಗೆ ಯೋಚಿಸಲಾಗುವುದು’ ಎಂದು ಹೇಳಿದರು.
ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿಯು ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು.
ಆಹ್ವಾನ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ಬಂದಿದೆ. ಆದರೆ, ಕಾರ್ಯಕ್ರಮಕ್ಕೆ ಹಾಜರಾಗುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಮಾಯಾವತಿ ತಿಳಿಸಿದ್ದಾರೆ.