ಲಖನೌ: ‘ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಜಾತಿಗಣತಿಗೆ ಸಂಬಂಧಿಸಿದಂತೆ ರಚನಾತ್ಮಕ ಕ್ರಮಗಳನ್ನು ಕೈಗೊಂಡರೆ ಬಿಎಸ್ಪಿಯು ಸಂಸತ್ತಿನ ಒಳಗೆ ಮತ್ತು ಹೊರಗೆ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತದೆ’ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಶುಕ್ರವಾರ ಹೇಳಿದ್ದಾರೆ.
ಕೇವಲ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್ಟಿ)ಜನಸಂಖ್ಯೆಯ ಜಾತಿಗಣತಿಯನ್ನು ನಡೆಸಲು ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ಪ್ರಧಾನಿ ಅವರೊಂದಿಗೆ ಚರ್ಚಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಂದಾಗಿದ್ದಾರೆ.
ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಾಯಾವತಿ ಅವರು, ‘ದೇಶದಲ್ಲಿರುವ ಒಬಿಸಿ ಜನಸಂಖ್ಯೆಯ ಜಾತಿಗಣತಿ ನಡೆಸಿದರೆ ಕೇಂದ್ರ ಸರ್ಕಾರಕ್ಕೆ ಬಿಎಸ್ಪಿಯು ಖಂಡಿತವಾಗಿಯೂ ಬೆಂಬಲ ನೀಡಲಿದೆ’ ಎಂದು ಹೇಳಿದ್ದಾರೆ.