ನಾರಾಯಣಪುರ: ಭದ್ರತಾ ಸಿಬ್ಬಂದಿ ಮೇಲೆ ಬುಧವಾರ ನಕ್ಸಲರು ನಡೆಸಿದ ದಾಳಿಯಲ್ಲಿ ಛತ್ತೀಸಗಢ ಸಶಸ್ತ್ರ ಪಡೆಯ (ಸಿಎಎಫ್) ಒಬ್ಬ ಯೋಧ ಮೃತಪಟ್ಟಿದ್ದು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಅಮ್ದಾಯಿ ಘಾಟಿ ಕಬ್ಬಿಣ ಗಣಿ ಪ್ರದೇಶದಲ್ಲಿ ಬೆಳಿಗ್ಗೆ 11 ಗಂಟೆಯ ವೇಳೆಗೆ ನಕ್ಸಲರು ನಾಡ ಬಾಂಬ್ ಸ್ಫೋಟಿಸಿ, ಗುಂಡಿನ ದಾಳಿ ನಡೆಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
‘ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ, ಸಿಎಎಫ್ನ 9ನೇ ಬೆಟಾಲಿಯನ್ನ ಯೋಧ ಕಮಲೇಶ್ ಸಾಹು ಮೃತಪಟ್ಟಿದ್ದು, ಮತ್ತೊಬ್ಬ ಯೋಧ ವಿನಯ್ ಕುಮಾರ್ ಸಾಹು ಗಾಯಗೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂಡೋ ಟಿಬೇಟಿಯನ್ ಗಡಿ ಪೊಲೀಸ್ ಪಡೆ ಮತ್ತು ಜಿಲ್ಲಾ ಮೀಸಲು ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.