ಕೋಲ್ಕತ್ತ: ಕಲ್ಲಿದ್ದಲು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಇಬ್ಬರು ನಿವೃತ್ತ ಅಧಿಕಾರಿಗಳಿಗೆ ಸೇರಿದ ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಸಿಬಿಐ ಗುರುವಾರ ಶೋಧ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದರು.
ರಾಜಧಾನಿ ಕೋಲ್ಕತ್ತ, ಅನ್ಸೋಲ್, ದುರ್ಗಾಪುರ, ಕುಲ್ಟಿ, ಮಾಲದಾ ಸೇರಿದಂತೆ 12 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದರು ಎಂದು ತಿಳಿಸಿದರು.
ನಿವೃತ್ತ ಅಧಿಕಾರಿಗಳು ಕಲ್ಲಿದ್ದಲು ಕಳವಿಗೆ ನೆರವು ನೀಡಿ ಆರ್ಥಿಕವಾಗಿ ಅನುಕೂಲ ಪಡೆದಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿತ್ತು. ಶೋಧ ಕಾರ್ಯಾಚರಣೆ ವೇಳೆ ನಿವೃತ್ತ ಅಧಿಕಾರಿಗಳು ಮತ್ತು ಅವರ ಕುಟುಂಬಸ್ಥರ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದು, ಆಸ್ತಿ ಮತ್ತು ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ದಾಖಲೆಪತ್ರಗಳನ್ನು ವಶಕ್ಕೆ ಪಡೆಯಲಾಯಿತು ಎಂದು ತಿಳಿಸಿದರು.