ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಂದ್ರದಿಂದ ಹಿಂದುಳಿದ ವರ್ಗಗಳ ಶೇ 73ರಷ್ಟು ಜನಸಂಖ್ಯೆಯ ನಿರ್ಲಕ್ಷ್ಯ: ರಾಹುಲ್‌

Published 3 ಮಾರ್ಚ್ 2024, 13:01 IST
Last Updated 3 ಮಾರ್ಚ್ 2024, 13:01 IST
ಅಕ್ಷರ ಗಾತ್ರ

ಪಟ್ನಾ: ಹಿಂದುಳಿದ ವರ್ಗಗಳಿಗೆ ಸೇರಿದ ದೇಶದ ಶೇ. 73ರಷ್ಟು ಜನಸಂಖ್ಯೆಯನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾನುವಾರ ಆರೋಪಿಸಿದ್ದಾರೆ.

ಬಿಹಾರ ರಾಜಧಾನಿ ಪಟ್ನಾದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಆಯೋಜಿಸಿದ್ದ ‘ಜನ ವಿಶ್ವಾಸ ರ‍್ಯಾಲಿ’ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯನ್ನು ಉಲ್ಲೇಖಿಸಿ, ‘ಒಂದು ಪಕ್ಷವು ಜನರ ನಡುವೆ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಆದರೆ, ನಾವು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿ ಪಸರಿಸುತ್ತಿದ್ದೇವೆ’ ಎಂದು ಹೇಳಿದ್ದಾರೆ.

‘ದೇಶದಲ್ಲಿ ರೈತರು, ಯುವಕರು ಮತ್ತು ದಲಿತರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರವು ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಶೇ. 73ರಷ್ಟು ಜನಸಂಖ್ಯೆಯನ್ನು ನಿರ್ಲಕ್ಷಿಸುತ್ತಿದೆ’ ಎಂದು ಗಾಂಧಿ ಆರೋಪಿಸಿದ್ದಾರೆ.

ಅಗ್ನಿವೀರ ನೇಮಕಾತಿ ಯೋಜನೆ ಉಲ್ಲೇಖಿಸಿ ಮಾತನಾಡಿದ ರಾಹುಲ್‌ ಗಾಂಧಿ, ಈ ಉಪಕ್ರಮವು ದೇಶದ ಯುವಕರ ವಿರುದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟವು ಗರಿಷ್ಠ ಸ್ಥಾನಗಳನ್ನು ಗೆಲ್ಲಲಿದೆ. ತಮ್ಮ (ಕಾಂಗ್ರೆಸ್‌) ವಿರುದ್ಧ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ (ಇ.ಡಿ), ಕೇಂದ್ರೀಯ ತನಿಖಾ ದಳ ಮತ್ತು ಆದಾಯ ತೆರಿಗೆ ಇಲಾಖೆಗಳಿಗೆ ವಿರೋಧ ಪಕ್ಷದ ನಾಯಕರು ಹೆದರುವುದಿಲ್ಲ’ ಎಂದು ಹೇಳಿದ್ದಾರೆ.

ದೇಶದ ಅಭ್ಯುದಯಕ್ಕಾಗಿ ಮತ್ತು ಸಂವಿಧಾನವನ್ನು ರಕ್ಷಿಸಲು ಮೋದಿ ಸರ್ಕಾರಕ್ಕೆ ಮತ ಹಾಕಬಾರದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT