ನವದೆಹಲಿ: ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳಾದ ಅನಂತ ರಾಮನಾಥ ಹೆಗಡೆ ಮತ್ತು ಕೆ.ಎಸ್. ಹೇಮಲೇಖಾ ಅವರನ್ನು ಕಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್ನ ಕೊಲಿಜಿಯಂ ಶಿಫಾರಸು ಮಾಡಿದೆ.
ಸಿಜೆಐ ಡಿ.ವೈ. ಚಂದ್ರಚೂಡ್ ಅಧ್ಯಕ್ಷತೆಯ ಕೊಲಿಜಿಯಂ, ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಇಬ್ಬರನ್ನು ಕಾಯಂ ನ್ಯಾಯಮೂರ್ತಿಗಳಾಗಿ ನೇಮಿಸುವಂತೆ ಶಿಫಾರಸಿನಲ್ಲಿ ತಿಳಿಸಿದೆ.
ಹೆಚ್ಚುವರಿ ನ್ಯಾಯಮೂರ್ತಿ ಸಿದ್ದಯ್ಯ ರಾಚಯ್ಯ ಅವರನ್ನು ಮತ್ತೆ ಒಂದು ವರ್ಷದ ಅವಧಿಗೆ ಅದೇ ಹುದ್ದೆಗೆ ಹೊಸದಾಗಿ ನೇಮಕ ಮಾಡಬಹುದು ಎಂದು ತಿಳಿಸಿದೆ.
ಮೇ ತಿಂಗಳಿನಲ್ಲಿ ಈ ಮೂವರನ್ನು ಕಾಯಂ ನ್ಯಾಯಮೂರ್ತಿಗಳಾಗಿ ನೇಮಿಸುವಂತೆ ಹೈಕೋರ್ಟ್ನ ಕೊಲಿಜಿಯಂ ಶಿಫಾರಸು ಮಾಡಿತ್ತು. ಇದಕ್ಕೆ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರು ಅನುಮೋದನೆ ನೀಡಿದ್ದರು.