ಸಾಗರ(ಮಧ್ಯಪ್ರದೇಶ): ಒಬಿಸಿ ಕೋಟಾಕ್ಕೆ ಮುಸ್ಲಿಮರನ್ನು ಸೇರಿಸುವ ಮೂಲಕ ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕಿದ್ದ ದೊಡ್ಡ ಪಾಲನ್ನು ಕಿತ್ತುಕೊಳ್ಳಲಾಗಿದೆ. ಈ ವಿಧಾನವನ್ನು ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಯೋಜಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.
ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಹಿಂದುಳಿದ ವರ್ಗದವರ ದೊಡ್ಡ ಶತ್ರುವಾಗಿದೆ ಎಂದಿದ್ದಾರೆ.
‘ಒಬಿಸಿ ಮೀಸಲಾತಿಯಡಿ ಎಲ್ಲಾ ಮುಸ್ಲಿಂ ಜಾತಿಗಳನ್ನು ಸೇರಿಸುವ ಮೂಲಕ ಹಿಂಬಾಗಿಲಿನ ಮೂಲಕ ಕರ್ನಾಟಕದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಕಾಂಗ್ರೆಸ್ ಮುಂದಾಗಿದೆ. ನಿಮ್ಮ ಭವಿಷ್ಯದ ಪೀಳಿಗೆಯನ್ನು ಸಂಪೂರ್ಣವಾಗಿ ನಾಶಪಡಿಸಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ’ ಎಂದು ಆರೋಪಿಸಿದರು.
‘ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದಿಲ್ಲ ಎಂದು ನಮ್ಮ ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಧರ್ಮಾಧಾರಿತ ಮೀಸಲಾತಿಯನ್ನು ಸ್ವತಃ ಅಂಬೇಡ್ಕರ್ ಅವರೇ ವಿರೋಧಿಸಿದ್ದರು. ಆದರೆ ವರ್ಷದ ಹಿಂದೆ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವ ಮೂಲಕ ಕಾಂಗ್ರೆಸ್ ಅಪಾಯಕಾರಿ ನಿರ್ಣಯವನ್ನು ತಳೆದಿತ್ತು. ಕಾನೂನುಬಾಹಿರ ತಂತ್ರಗಳನ್ನು ಅನುಸರಿಸುವ ಮೂಲಕ ಕರ್ನಾಟಕದಲ್ಲಿ ಮುಸ್ಲಿಮರಿಗೆ ಮೀಸಲಾತಿ ಒದಗಿಸಲಾಗಿದೆ’ ಎಂದರು.
‘ಒಬಿಸಿ ಸಮುದಾಯದ ದೊಡ್ಡ ಶತ್ರು ಎಂದರೆ ಅದು ಕಾಂಗ್ರೆಸ್. ಒಬಿಸಿಗಳ ಹಕ್ಕುಗಳನ್ನು ಕಸಿದುಕೊಳ್ಳುವ ಮೂಲಕ ಸಾಮಾಜಿಕ ನ್ಯಾಯವನ್ನು ಕೊಲೆ ಮಾಡಿದೆ. ಸಂವಿಧಾನದ ಆಶಯವನ್ನು ಉಲ್ಲಂಘಿಸಿ ಅಂಬೇಡ್ಕರ್ ಅವರನ್ನು ಅವಮಾನಿಸಿದೆ’ ಎಂದು ಹೇಳಿದರು.
‘ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಧ್ಯಪ್ರದೇಶವನ್ನು ಹಿಂದುಳಿದ ರಾಜ್ಯ ಎಂದು ಕರೆಯಲಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆಯೇ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಯಿತು’ ಎಂದು ಮೋದಿ ಹೇಳಿದರು.