ಗುರುಗ್ರಾಮ/ಚಂಡೀಗಢ (ಪಿಟಿಐ): ಹರಿಯಾಣದ ನೂಹ್ನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ಪೊಲಿಸರು ಬಂಧಿಸಿದ್ದಾರೆ.
ಹಿಂಸಾಚಾರಕ್ಕೆ ಸಂಬಂಧಿಸಿ ದಾಖಲಾಗಿದ್ದ ಎಫ್ಐಆರ್ನಲ್ಲಿ ಫಿರೋಜ್ಪುರ ಜಿರ್ಕಾದ ಶಾಸಕರಾಗಿರುವ ಮಮ್ಮನ್ ಅವರ ಹೆಸರು ಇದ್ದು, ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಧಾರ್ಮಿಕತೆಯ ಆಧಾರದಲ್ಲಿ ಎರಡು ಗುಂಪುಗಳ ನಡುವೆ ದ್ವೇಷ ಭಾವನೆ ಉತ್ತೇಜಿಸಿರುವ ಆರೋಪ ಮಮ್ಮನ್ ಅವರ ಮೇಲಿದೆ ಎಂದು ಗಲಭೆಯ ಕುರಿತು ತನಿಖೆ ನಡೆಸುತ್ತಿರುವ ಪೊಲೀಸ್ ಉಪ ವರಿಷ್ಠಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ.
‘ಮಮ್ಮನ್ ಅವರನ್ನು ಬಂಧಿಸಿರುವುದಾಗಿ ಪೊಲೀಸರು ನಮಗೆ ಮಾಹಿತಿ ನೀಡಿದ್ದಾರೆ’ ಎಂದು ಕಾಂಗ್ರೆಸ್ ಶಾಸಕ ಅಫ್ತಾಬ್ ಅಹಮ್ಮದ್ ತಿಳಿಸಿದ್ದಾರೆ.
‘ಮಮ್ಮನ್ ಅವರ ಬಂಧನದ ಬಳಿಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
'ಸಾಮಾಜಿಕ ಮಾಧ್ಯಮಗಳಲ್ಲಿ ದಾರಿತಪ್ಪಿಸುವ ಸುದ್ದಿಗಳನ್ನು ಹರಡುವುದನ್ನು ತಡೆಯುವ ಸಲುವಾಗಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ವಿ.ಎಸ್.ಎನ್. ಪ್ರಸಾದ್ ಹೇಳಿದ್ದಾರೆ.
ಜುಲೈ 31 ರಂದು ನೂಹ್ನಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆದ ಮೆರವಣಿಗೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಆರು ಮಂದಿ ಮೃತಪಟ್ಟಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.