ಮುಂಬೈ:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆರೋಪಿಯಾಗಿದ್ದ ಸೊಹ್ರಾಬುದ್ದೀನ್ ಶೇಕ್ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಅಸಹಜವಾಗಿ ಮೃತಪಟ್ಟಿದ್ದ ನ್ಯಾಯಾಧೀಶ ಬಿ.ಎಚ್.ಲೋಯಾ ಸಾವಿನ ಪ್ರಕರಣದ ಮರುತನಿಖೆ ನಡೆಸುವ ಬಗ್ಗೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಒಲವು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನ ದಿಗ್ವಿಜಯ್ ಸಿಂಗ್ ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
‘ಈ ಪ್ರಕರಣದಲ್ಲಿ ಆಳವಾದ ತನಿಖೆ ನಡೆಯಬೇಕಿದೆ ಎಂದು ಮಹಾರಾಷ್ಟ್ರದ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಅಂತಹದ್ದೊಂದು ಬೇಡಿಕೆ ಬಂದರೆ, ವಿಶೇಷ ತನಿಖಾ ತಂಡವನ್ನು ರಚಿಸಿ ಮರುತನಿಖೆಗೆ ಆದೇಶಿಸಬಹುದು’ ಎಂದು ಪವಾರ್ ಹೇಳಿದ್ದಾರೆ.
‘ಮಹಾರಾಷ್ಟ್ರದಲ್ಲಿ ಈಗ ಬಿಜೆಪಿಯೇತರ ಮಹಾ ವಿಕಾಸ ಆಘಾಡಿ ಸರ್ಕಾರವಿದೆ. ಲೋಯಾ ಸಾವಿನ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ಏಕೆ ರಚಿಸಬಾರದು’ ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.