ಉತ್ತರ ಪ್ರದೇಶ ಜನರು ನೆಹರೂ–ಗಾಂಧಿ ಕುಟುಂಬದ ನಾಲ್ಕು ತಲೆಮಾರಿನ ಜನರನ್ನು ಆಯ್ಕೆ ಮಾಡಿ ಲೋಕಸಭೆಗೆ ಕಳುಹಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯದ ಜನರನ್ನು ಅವಮಾನಿಸಿದ್ದಾರೆ ಎಂದು ಠಾಕೂರ್ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಅವರು ರಾಜ್ಯದ ಜನರ ಮನಸ್ಸಿಗೆ ನೋವು ಉಂಟು ಮಾಡಿದ್ದು, ಅವರ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಸುಳ್ಳು ಭರವಸೆಗಳನ್ನು ನೀಡಿ ಕಾಂಗ್ರೆಸ್ ಸಾರ್ವಜನಿಕರಿಗೆ ಮೋಸ ಮಾಡಿದೆ‘ ಎಂದು ಆರೋಪಿಸಿದ್ದಾರೆ.
ಇತ್ತೀಚೆಗೆ ನಡೆದ ರ್ಯಾಲಿಯೊಂದರಲ್ಲಿ ‘ವಾರಾಣಸಿಯ ರಸ್ತೆಗಳಲ್ಲಿ ಮದ್ಯವ್ಯಸನಿಗಳು ಇರುವುದನ್ನು ಗಮನಿಸಿದ್ದೇನೆ’ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಠಾಕೂರ್, ಕಾಂಗ್ರೆಸ್ ನಾಯಕ ಪ್ರಜ್ಞೆ ಕಳೆದುಕೊಂಡಿದ್ದಾರೆ. ಅವರು ಏನೂ ಹೇಳುತ್ತಿದ್ದಾರೆಂದು ಅವರಿಗೆ ತಿಳಿದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಯುವಕರಿಗೆ ಐದು ಲಕ್ಷ ಸರ್ಕಾರಿ ಉದ್ಯೋಗ ನೀಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಹೇಳಿದ್ದ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ. ಆದರೆ, ಇದೀಗ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಹೇಳಿಕೆಯಿಂದ ಹಿಂದೆ ಸರಿದಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ನ ಸುಳ್ಳು ಭರವಸೆಗಳಿಂದ ಜನರು ಬೇಸತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುತ್ತಾರೆ ಎಂದು ಠಾಕೂರ್ ತಿಳಿಸಿದ್ದಾರೆ.