ನವದೆಹಲಿ: ‘ರಾಜ್ಯದಲ್ಲಿ ಬಿಜೆಪಿ ಬದಲಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಆದಾಯ ತೆರಿಗೆ (ಐ.ಟಿ) ಇಲಾಖೆಗಳೊಂದಿಗೆ ಹೋರಾಡುವುದೇ ದೊಡ್ಡ ಸವಾಲು’ ಎಂದು ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಶುಕ್ರವಾರ ಪ್ರತಿಪಾದಿಸಿದರು.
‘ಇ.ಡಿ ಮತ್ತು ಐ.ಟಿ ಇಲಾಖೆಗಳು ಬಿಜೆಪಿಯ ಪ್ರಬಲ ಶಾಖೆಗಳಾಗಿವೆ. ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಅವು ಹೆದರಿಕೆ ಹುಟ್ಟಿಸಲು ಯತ್ನಿಸುತ್ತಿವೆ. ಆದರೆ ಅವು ತಮ್ಮ ಯತ್ನದಲ್ಲಿ ಯಶ ಕಾಣುವುದಿಲ್ಲ’ ಎಂದು ವಾಗ್ದಾಳಿ ನಡೆಸಿದರು.
‘ಮುಂಬರುವ ಛತ್ತೀಸಗಢ ವಿಧಾನಸಭಾ ಚುನಾವಣೆಯಲ್ಲಿ ಕೆಲವು ದುರ್ಬಲ ಶಾಸಕರ ಬದಲಾಗಿ ಹೊಸ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು’ ಎಂದು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಮಾಹಿತಿ ನೀಡಿದರು.
‘ಛತ್ತೀಸಗಢದ ಕಾಂಗ್ರೆಸ್ ಘಟಕದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದ್ದು, ಎಲ್ಲರೂ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ’ ಎಂದರು.