ನಾಗ್ಪುರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ ನಡೆಸಲಿದೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.
ಕಾಂಗ್ರೆಸ್ನ 139ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗ ಕಳೆದ 40 ವರ್ಷಗಳಲ್ಲೇ ಗರಿಷ್ಠ ಮಟ್ಟವನ್ನು ತಲುಪಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ತಮ್ಮ ಪಕ್ಷ ಜಾತಿ ಗಣತಿ ನಡೆಸಲಿದೆ ಎಂದು ತಿಳಿಸಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಎರಡು ಸಿದ್ಧಾಂತಗಳ ನಡುವೆ ಸಂಘರ್ಷವಿದೆ ಎಂದಿದ್ದಾರೆ.
‘ನಮ್ಮ ಪಕ್ಷ ಬಿಜೆಪಿಯ ಹಾಗಲ್ಲ. ಕಿರಿಯ ಕಾಂಗ್ರೆಸ್ ಕಾರ್ಯಕರ್ತ ಕೂಡ ಪಕ್ಷದ ಉನ್ನತ ನಾಯಕರನ್ನು ಪ್ರಶ್ನಿಸಬಹುದು ಮತ್ತು ಅವರ ನಿರ್ಣಯಗಳನ್ನು ತಿರಸ್ಕರಿಸಬಹುದು’ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಹಾರಾಷ್ಟ್ರ ಹಾಗೂ ಇತರ ರಾಜ್ಯಗಳ ಹಲವು ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.