ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿದ್ದು, ಕೊಚ್ಚಿಯ ಕ್ರಿಶ್ಚಿಯನ್ ಸಮುದಾಯದ ಸಮಾವೇಶ ಕೇಂದ್ರದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಸ್ಫೋಟದ ಕುರಿತಂತೆ ಅವಲೋಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ, ಕೇಂದ್ರ ಗೃಹ ಸಚಿವರ ನಿರ್ದೇಶನದ ಮೇರೆಗೆ ಭಯೋತ್ಪಾದನಾ ನಿಗ್ರಹ ಪಡೆ, ರಾಷ್ಟ್ರೀಯ ಭದ್ರತಾ ಸಿಬ್ಬಂದಿ(ಎನ್ಎಸ್ಜಿ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ತಂಡಗಳನ್ನು ಕೇರಳಕ್ಕೆ ಕಳುಹಿಸಲಾಗುತ್ತಿದೆ.
‘ಸ್ಫೋಟದ ನಂತರ ಕೇಂದ್ರದ ಗೃಹ ಸಚಿವರು ಕೇರಳ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದು, ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸಿದ್ದಾರೆ. ಮುಖ್ಯಮಂತ್ರಿ ಅವರು ಅಮಿತ್ ಶಾ ಅವರಿಗೆ ಘಟನೆಯ ಬಗ್ಗೆ ವಿವರಿಸಿದ್ದಾರೆ’ಎಂದು ಮೂಲವೊಂದು ತಿಳಿಸಿದೆ.
ಇಂದು ಬೆಳಿಗ್ಗೆ ಕೊಚ್ಚಿಯ ಕಲಮಸ್ಸೆರಿಯ ಸಮಾವೇಶ ಕೇಂದ್ರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಪ್ರಾರ್ಥನೆಯ ಮಧ್ಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ಸಮಾವೇಶ ಕೇಂದ್ರದಲ್ಲಿದ್ದ ಜನರು ಸುದ್ದಿಗಾರರಿಗೆ ತಿಳಿಸಿದರು.