ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಕೊರೊನಾ ನಿಯಂತ್ರಣಕ್ಕಾಗಿ ಕೋವಿಡ್ ಮಾರ್ಗಸೂಚಿಗಳ ಪಾಲನೆಯನ್ನು ಮಾರ್ಚ್ 31ರವರೆಗೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಿ, ಶುಕ್ರವಾರ ಆದೇಶ ಹೊರಡಿಸಿದೆ.
ಕೋವಿಡ್ ನಿಯಂತ್ರಣಕ್ಕೆ ಎಲ್ಲ ರಾಜ್ಯಗಳು ಪ್ರಮಾಣಿತ ಕಾರ್ಯತಂತ್ರ ವಿಧಾನವನ್ನು (ಎಸ್ಒಪಿ) ಕಟ್ಟುನಿಟ್ಟಾಗಿ ಪಾಲಿಸಬೇಕು. ವಿವಿಧ ಚಟುವಟಿಕೆಗಳನ್ನು ನಡೆಸುವಾಗ ಕೋವಿಡ್ ಮಾರ್ಗಸೂಚಿ ಸರಿಯಾಗಿ ಪಾಲನೆಯಾಗುತ್ತಿದೆಯೇ ಎನ್ನುವುದರ ಮೇಲೂ ಕಣ್ಗಾವಲು ಇಡಬೇಕು ಎಂದು ಸಚಿವಾಲಯ ಸೂಚಿಸಿದೆ.
ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳು ಮತ್ತು ಹೊಸ ಕೋವಿಡ್ 19 ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿರುವುದು ಕಂಡುಬಂದಿದೆ. ಆದರೆ, ಈ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ನಿವಾರಿಸಲು ಕಣ್ಗಾವಲು, ನಿಯಂತ್ರಣ ಮತ್ತು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಸಚಿವಾಲಯ ಹೇಳಿದೆ.
ಕಂಟೈನ್ಮೆಂಟ್ ವಲಯಗಳನ್ನು ಎಚ್ಚರಿಕೆಯಿಂದ ಗುರುತಿಸಬೇಕು. ಈ ವಲಯಗಳಲ್ಲಿ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಜತೆಗೆ, ಅನುಮತಿ ನೀಡಿರುವ ವಿವಿಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸೂಚಿಸಿರುವ ಎಸ್ಒಪಿಯನ್ನು ಸರಿಯಾಗಿ ಪಾಲಿಸಲಾಗುತ್ತಿದೆಯೇ ಎನ್ನುವುದನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಅದು ಹೇಳಿದೆ.
ಕೋವಿಡ್ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಲು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿರುವ ಕೇಂದ್ರ ಗೃಹ ಸಚಿವಾಲಯ, ಇದರಿಂದ ಕೋವಿಡ್ ಪ್ರಸರಣ ಕೊಂಡಿಯನ್ನು ತಪ್ಪಿಸಿ, ಸಾಂಕ್ರಾಮಿಕ ರೋಗ ಇನ್ನಷ್ಟು ಹರಡುವುದನ್ನು ತಪ್ಪಿಸಬಹುದಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.