ನವದೆಹಲಿ: ಕೊರೊನಾ ವೈರಸ್ನ ಉಪತಳಿ ಜೆಎನ್–1 ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಭಾರತೀಯ ಸಾರ್ಸ್-ಕೋವ್-2 ಜಿನೋಮ್ ಒಕ್ಕೂಟದ (ಐಎನ್ಎಸ್ಎಸಿಒಜಿ) ಮುಖ್ಯಸ್ಥ ಡಾ. ಎನ್.ಕೆ. ಅರೋರಾ ಹೇಳಿದ್ದಾರೆ.
ಕೇರಳದಲ್ಲಿ ಮೃತಪಟ್ಟ ವ್ಯಕ್ತಿ ಕೇವಲ ವೈರಸ್ ಸೋಂಕಿನಿಂದ ಮೃತಪಟ್ಟಿಲ್ಲ. ಆತನಿಗೆ ಗಂಭೀರ ಆರೋಗ್ಯ ಸಮಸ್ಯೆಗಳಿದ್ದವು ಎಂದು ಅವರು ಹೇಳಿದ್ದಾರೆ.
‘ಮೃತ ವ್ಯಕ್ತಿಯು ಹೃದಯ, ಶ್ವಾಸಕೋಶ ಮತ್ತು ಮೂತ್ರಪಿಂಡದ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಕಾರಣಗಳಿಂದ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಕೇವಲ ಜೆಎನ್.1 ಸೋಂಕಿನಿಂದ ಅಲ್ಲ’ ಎಂದು ಅರೋರಾ ನುಡಿದಿದ್ದಾರೆ.
ಈ ಉಪತಳಿ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಸೋಂಕಿತರ ಮಾದರಿಗಳ ಸಂಖ್ಯೆ ಬಹಳಷ್ಟು ಕಡಿಮೆ ಇದ್ದು, ಎಲ್ಲ ರಾಜ್ಯಗಳಿಂದ ಮಾದರಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.